ಶಿವಮೊಗ್ಗ : ಜಿಲ್ಲೆಯ ಸಾಗರ ತಾಲೂಕಿನ ಕರೂರು ಹೋಬಳಿಯ ಹಾಳಸಸಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದ್ದು, ಹೃದಯಾಘಾತದಿಂದ 6 ವರ್ಷದ ಬಾಲಕ ಮೃತಪಟ್ಟಿದ್ದಾನೆ.
ಹಾಳಸಸಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 1ನೇ ತರಗತಿ ವಿದ್ಯಾರ್ಥಿ ತ್ರಿಲೋಕ್ ಜೈನ್ (6) ಶಾಲಾ ಆವರಣದಲ್ಲಿ ಶನಿವಾರ ಮಧ್ಯಾಹ್ನ ಏಕಾಏಕಿ ಕುಸಿದು ಬಿದ್ದಿದ್ದಾನೆ. ತಕ್ಷಣ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗಮಧ್ಯೆಯೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಮೃತ ತ್ರಿಲೋಕ್ ಜೈನ್ ಸಾಗರದ ಕೊಡನವಳ್ಳಿ ಗ್ರಾಮದ ಗೌತಮ್ ಜೈನ್ ಹಾಗೂ ಶಿಲ್ಪಾ ದಂಪತಿಯ ಪುತ್ರನಾಗಿದ್ದಾನೆ. ಶನಿವಾರ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಬಾಲಕನ ಅಕಾಲಿಕ ಸಾವಿನಿಂದ ಗ್ರಾಮದಲ್ಲಿ ಶೋಕ ಮಡುಗಟ್ಟಿದ್ದು, ಗ್ರಾಮಸ್ಥರು, ಶಿಕ್ಷಕರು ಹಾಗೂ ಎಸ್ಡಿಎಂಸಿ ಸದಸ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

