ಹೊಸನಗರ : ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಹಾಗೂ ಕರ್ನಾಟಕ ಫಿಲಂ ಚೇಂಬರ್ನ ಮಾಜಿ ಅಧ್ಯಕ್ಷ ಬಾಮಾ ಹರೀಶ್ ಅವರ ಪುತ್ರ ಉಲ್ಲಾಸ್ (28) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೊಡಚಾದ್ರಿ ಬೆಟ್ಟಕ್ಕೆ ಇಂದು ಬೆಳಗ್ಗೆ ಸ್ನೇಹಿತನೊಂದಿಗೆ ಟ್ರೆಕ್ಕಿಂಗ್ಗೆ ತೆರಳಿದ್ದ ಉಲ್ಲಾಸ್ ಅವರಿಗೆ ಸುಮಾರು 10 ಗಂಟೆ ವೇಳೆಗೆ ಏಕಾಏಕಿ ಹೃದಯಾಘಾತ ಸಂಭವಿಸಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಬಳಿಕ ಹೊಸನಗರ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ.
ಉಲ್ಲಾಸ್ ಅವರ ಮದುವೆ ಇದೇ ವರ್ಷದ ಡಿಸೆಂಬರ್ನಲ್ಲಿ ನಿಗದಿಯಾಗಿತ್ತು. ಚಂದನಾ ಗೌಡ ಅವರೊಂದಿಗೆ ನಿಶ್ಚಿತಾರ್ಥ ನೆರವೇರಿದ್ದು, ಇತ್ತೀಚೆಗಷ್ಟೇ ಕುಟುಂಬದವರ ಸಮ್ಮುಖದಲ್ಲಿ ಸರಳವಾಗಿ ದೀಪದ ಶಾಸ್ತ್ರವೂ ನಡೆದಿತ್ತು. ಪ್ರಸ್ತುತ ಉಲ್ಲಾಸ್ ಅವರ ಪಾರ್ಥಿವ ಶರೀರವನ್ನು ಹೊಸನಗರ ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಕುಟುಂಬಸ್ಥರು ಹಾಗೂ ಚಿತ್ರರಂಗದ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.



