ಕುಂದಾಪುರ : ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಹಲವೆಡೆ ನಕ್ಸಲರ ಓಡಾಟದ ಸುಳಿವು ಸಿಕ್ಕಿದೆ. ಬೈಂದೂರು ತಾಲೂಕಿನ ಕೊಲ್ಲೂರು, ಮುದೂರು, ಜಡ್ಕಲ್, ಬೆಳ್ಕಲ್ ಗ್ರಾಮಗಳಿಗೆ ಭೇಟಿ ನೀಡಿರುವ ಶಂಕೆ ವ್ಯಕ್ತವಾಗಿದೆ. ನಾಲ್ವರು ನಕ್ಸಲರು ಹಲವು ಮನೆಗಳಿಗೆ ಭೇಟಿ ನೀಡಿರುವ ಅನುಮಾನ ವ್ಯಕ್ತವಾಗಿದೆ. ಹಲವಾರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಮುದೂರು ಭಾಗದಲ್ಲಿ ನಕ್ಸಲ್ ಚಟುವಟಿಕೆಗಳು ಮರುಕಳಿಸಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ.
ಮಂಗಳವಾರ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿವೈಎಸ್ಪಿ) ಬೆಳ್ಳಿಯಪ್ಪ, ಕೊಲ್ಲೂರಿನಿಂದ ನಕ್ಸಲ್ ನಿಗ್ರಹ ದಳ ಮತ್ತು ಬೈಂದೂರು ಪೊಲೀಸ್ ಠಾಣೆಯ ಸಿಬ್ಬಂದಿಯೊಂದಿಗೆ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿದರು.
ಹಸಿರು ಬಣ್ಣದ ಬಟ್ಟೆ ತೊಟ್ಟಿದ್ದು, ಇಬ್ಬರಲ್ಲಿ ಶಸ್ತ್ರಾಸ್ತ್ರ ಇರುವ ಬಗ್ಗೆ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. ಕಳೆದ ಎರಡು ತಿಂಗಳಿನಿಂದ ನಕ್ಸಲರು ಸಕ್ರಿಯ ಆಗಿದ್ದಾರೆ ಎನ್ನಲಾಗಿದೆ. ಸಮವಸ್ತ್ರದಲ್ಲಿ ಶಸ್ತ್ರಧಾರಿ ವ್ಯಕ್ತಿಗಳು ಬೆಳ್ಕಲ್, ಮುದೂರು, ಉದಯನಗರ ಅರಣ್ಯ ಪ್ರದೇಶಗಳಲ್ಲಿ ಮನೆಗಳಿಗೆ ಭೇಟಿ ನೀಡಿ ವಿವಿಧ ವಿಷಯಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.
ಕೈಯ್ಯಲಿ ಬಂದೂಕು ಇದ್ದ ಕಾರಣ ಅವರನ್ನು ಕಂಡ ಸ್ಥಳೀಯ ನಿವಾಸಿಗಳು ಭಯಭೀತರಾಗಿ ನೋಡಿದರು ನೋಡದ ರೀತಿ ಪೊಲೀಸರಿಗೆ ಮಾಹಿತಿ ನೀಡಲು ಹಿಂದೇಟುಹಾಕುತ್ತಿರುವುದು ಬೆಳಕಿಗೆ ಬಂದಿದೆ.ಕೇರಳದಿಂದ ಕರ್ನಾಟಕಕ್ಕೆ ಬಂದಿರುವ ಬಗ್ಗೆಯೂ ಪೊಲೀಸರ ಅನುಮಾನ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಯಾರೇ ಅಪರಿಚಿತರು ಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡುವಂತೆ ಸೂಚನೆ ನೀಡಿದ್ದಾರೆ.


