ಬೆಂಗಳೂರು : ಸರಕಾರದ ದೊಡ್ಡ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಇಂದಿನಿಂದ ದೋಸ್ತಿಗಳು ಮೈಸೂರು ಚಲೋಆರಂಭಿಸಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಅಕ್ರಮವಾಗಿ 14 ನಿವೇಶಗಳನ್ನು ಹಂಚಲಾಗಿದೆ ಎಂಬ ಆರೋಪ ಬಿಜೆಪಿ, ಜೆಡಿಎಸ್ ನದ್ದಾಗಿದೆ. ಕೆಂಗೇರಿಯ ನೈಸ್ ಜಂಕ್ಷನ್ ಬಳಿ ಇರುವ ಕೆಂಪಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಇಂದು ಪಾದಯಾತ್ರೆಗೆ ಚಾಲನೆ ನೀಡಿದರು. ಬೆಂಗಳೂರಿನಿಂದ ಮೈಸೂರಿಗೆ ಬೃಹತ್ ಪಾದಯಾತ್ರೆ ಆರಂಭಗೊಂಡಿದ್ದು ಅಲ್ಲೀಗ ಭಾರೀ ಸಂಚಾರದಟ್ಟಣೆ ಉಂಟಾಗಿದೆ. ಡಾ. ರಾಧಾ ಮೋಹನ್ ದಾಸ್ ಅಗರವಾಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಹಾಜರಿದ್ದರು.
ಜೆಡಿಸ್ ಹಾಗೂ ಬಿಜೆಪಿ ಜಂಟಿಯಾಗಿ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಯ ಗೀತೆಯನ್ನು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಬಿಡುಗಡೆ ಮಾಡಿದರು. ಹೆಚ್ಡಿಕೆ ಮಾತನಾಡಿ, ಇದು ಜನವಿರೋಧಿ ಸರ್ಕಾರವಾಗಿದ್ದು ಮುಡಾ, ವಾಲ್ಮೀಕಿ ಪ್ರಕರಣ ಬಯಲಿಗೆ ಬಂದಿದೆ. ಜನರ ಆಸ್ತಿಗಳನ್ನು ನುಂಗಿದ ಸರ್ಕಾರದ ವಿರುದ್ಧ ನಾವು ಜನಾಂದೋಲನ ಮಾಡುತ್ತಿದ್ದೇವೆ ಎಂದು ತಿಳಿಸಿದರು.ದೇವೇಗೌಡರ ಕುಟುಂಬದಿಂದ ನೈಸ್ ಸುತ್ತಮುತ್ತ ಅಕ್ರಮ ಆಸ್ತಿ ಎಂಬ ಡಿಕೆ ಶಿವಕುಮಾರ್ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಸರ್ಕಾರ ಅವರ ಕೈಯಲ್ಲೇ ಇದೆ. ನಾವು ಅಕ್ರಮವಾಗಿ ಆಸ್ತಿ ಮಾಡಿದರೆ ಸರ್ಕಾರ ವಶಪಡಿಸಿಕೊಳ್ಳಲಿ. ಸರ್ಕಾರ ಅವರದ್ದೇ ಇದೆ, ಮುಟ್ಟುಗೋಲು ಹಾಕಿಕೊಳ್ಳಲಿ. ನಾವು ನ್ಯಾಯ ಬದ್ಧವಾಗಿ ಬದುಕಿದ್ದೇವೆ, ಇವರ ಥರ ಬದುಕಿಲ್ಲ. ಶಿವಕುಮಾರ್ ಬಿಡದಿಯಲ್ಲಿ ಆರೋಪ ಮಾಡಿದ್ದಾರೆ. ಅವರಿಗೆ ನಾನು ಬಿಡದಿಯಲ್ಲೇ ಉತ್ತರ ನೀಡುತ್ತೇನೆ ಎಂದು ತಿರುಗೇಟು ನೀಡಿದರು.
ಒಟ್ಟು ಆಗಸ್ಟ್ 3 ರಿಂದ 10ರವರೆಗೆ 140 ಕಿಮೀ ಪಾದಯಾತ್ರೆ ಇದಾಗಿದೆ. ಕೆಂಗೇರಿಯಲ್ಲಿ ಉದ್ಘಾಟನೆ, ಮೈಸೂರಿನ ಸಮಾರೋಪ ಕಾರ್ಯಕ್ರಮ ಹೊರತುಪಡಿಸಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ ಮತ್ತು ಶ್ರೀರಂಗಪಟ್ಟಣದಲ್ಲಿ ಬಹಿರಂಗ ಸಭೆಗಳು ನಡೆಯಲಿವೆ. ಬೆಳಗ್ಗೆ 10 ಕಿ.ಮೀ. ಮಧ್ಯಾಹ್ನ ಊಟದ ನಂತರ 10 ಕೀ.ಮೀನಂತೆ ಪ್ರತಿದಿನ 20 ಕಿ.ಮೀ. ಕ್ರಮಿಸಲು ಯೋಜಿಸಲಾಗಿದೆ. ಆಗಸ್ಟ್ 10ರಂದು ಬೆಳಗ್ಗೆ 10.30ಕ್ಕೆ ಮೈಸೂರಿನಲ್ಲಿ ಸಮಾರೋಪ ಸಮಾರಂಭ ಆಯೋಜಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅಥವಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಹಲವು ನಾಯಕರು ಭಾಗಿಯಾಗುವ ಸಾಧ್ಯತೆಯಿದೆ ಎಂಬ ಮಾಹಿತಿ ತಿಳಿದಿದೆ.


