ಬೆಂಗಳೂರು : ಸಿಎಂ ಸಿದ್ದರಾಮಯ್ಯನವರಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಸದ್ಯಕ್ಕೆ ಯಾವುದೇ ಎಫ್ಐಆರ್ ದಾಖಲಾಗಲು ಅನುಮತಿ ಸಿಗದ ಕಾರಣ ಸಿಎಂ ಬಿಸೋ ದೊಣ್ಣೆಯಿಂದ ಪಾರಾಗಿದ್ದಾರೆ.ತಮ್ಮ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಿಎಂ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಆ.29ರ ವರೆಗೆ ಯಾವುದೇ ಆದೇಶ ನೀಡಿದಂತೆ ಜನಪ್ರತಿನಿಧಿಗಳ ಕೋರ್ಟ್ಗೆ ಸೂಚನೆ ನೀಡಿದೆ.
ಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದ ಆರೋಪ ಪ್ರಕರಣ ತೀವ್ರ ಕುತೂಹಲ ಕೆರಳಿಸಿದೆ. ಸಿಎಂ ವಿರುದ್ಧ ತನಿಖೆಗೆ ಗವರ್ನರ್ ಆದೇಶ ನೀಡಿದ ಮೇಲೆ ಸಿದ್ದರಾಮಯ್ಯ ಅವರು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಇಂದು ನ್ಯಾ. ಎಂ ನಾಗಪ್ರಸನ್ನ ಅವರ ಪೀಠದಲ್ಲಿ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆ ನಡೆಯಿತು. ಸಿಎಂ ಪರವಾಗಿ ಕಾಂಗ್ರೆಸ್ ನಾಯಕ, ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ವಾದ ಮಂಡಿಸಿದ್ದಾರೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು 17A PC Act & 218 ಭಾರತೀಯ ದಂಡ ಸಂಹಿತೆ (BNS) ಅಡಿ ಅನುಮತಿ ನೀಡಿದ್ದಾರೆ. ರಾಜ್ಯಪಾಲರು ವಿವೇಚನೆ ಇಲ್ಲದೇ ಷೋಕಾಸ್ ನೀಡಿದ್ದಾರೆ ಎಂದು ಸಿದ್ದರಾಮಯ್ಯ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ವಾದ ಮಂಡಿಸಿದರು. ಇದಕ್ಕೆ ರಾಜ್ಯಪಾಲರ ಪರ ಎಸ್ಜಿ ತುಷಾರ್ ಮೆಹ್ತಾ ಆಕ್ಷೇಪ ವ್ಯಕ್ತಪಡಿಸಿದರು. ರಾಜ್ಯಪಾಲರು ಯಾವುದೇ ವಿವೇಚನೆ ಇಲ್ಲದೆ ಷೋಕಾಸ್ ನೋಟಿಸ್ ನೀಡಬಹುದು. ಅದು ಚರ್ಚೆಯ ವಿಷಯವೇ ಅಲ್ಲ ಎಂದು ಪ್ರತಿವಾದ ಮಂಡಿಸಿದರು.
ಲ್ಯಾಂಡ್ ಡಿನೋಟಿಫಿಕೇಷನ್ ಪ್ರಕ್ರಿಯೆ ಹಾಗೂ ಭೂ ಪರಿವರ್ತನೆ ಸೇರಿ ಇಲ್ಲಿಯವರೆಗೆ ನಡೆದ ಪ್ರಕ್ರಿಯೆಗಳನ್ನು ಉಲ್ಲೇಖಿಸಿ ವಕೀಲ ಮನು ಸಿಂಘ್ವಿ ವಾದ ಮಂಡಿಸಿ, 2004 ರಿಂದ 2010ರ ತನಕ ಸಿದ್ದರಾಮಯ್ಯ ಪಾತ್ರವೇ ಇಲ್ಲ. 1992ರಲ್ಲಿ ಮುಡಾ ಸ್ವಾಧೀನವನ್ನು 1998ರಲ್ಲಿ ಡಿನೋಟಿಫಿಕೇಷನ್ ಮಾಡಲಾಗಿದೆ. 2004ರಲ್ಳಿ ಸಿಎಂ ಬಾಮೈದನಿಗೆ ಮಾರಾಟ ಆಗಿದೆ. 2005ರಲ್ಲಿ ಕೃಷಿ ಜಮೀನಾಗಿ ಪರಿವರ್ತನೆ ಮಾಡಲಾಗಿದ್ದು, 2010ರಲ್ಲಿ ಸಿಎಂ ಪತ್ನಿಗೆ ದಾನಪತ್ರ ಮಾಡಲಾಗಿದೆ. ಬಹುತೇಕ ಸಮಯದಲ್ಲಿ ಸಿದ್ದರಾಮಯ್ಯ ಅಧಿಕಾರದಲ್ಲಿ ಇರಲಿಲ್ಲ. ಯಾವುದೂ ತರಾತುರಿಯಲ್ಲಿ ನಡೆದಿಲ್ಲ. 2020ರಲ್ಲಿ ಭೂಮಿಗೆ ಪರಿಹಾರವಾಗಿ ನಿವೇಶನಗಳನ್ನು ಹಂಚಲಾಗಿದೆ. 2022ರಲ್ಲಿ ಸೈಟ್ಗಳ ಕ್ರಯ ಆಗಿದೆ ಎಂದು ತಿಳಿಸಿದರು.
ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಬಸವರಾಜ್ ಬೊಮ್ಮಾಯಿ ಸೇರಿ ಹಲವರ ವಿರುದ್ದ ಅನುಮತಿ ಕೇಳಲಾಗಿದೆ. ಈ ವಿಚಾರಗಳು ಪ್ರಾಸಿಕ್ಯೂಷನ್ ಅನುಮತಿ ನೀಡಲು ಮುಖ್ಯವೇ ಎಂದು ಜಡ್ಜ್ ಪ್ರಶ್ನಿಸಿದರು. ಇದಕ್ಕೆ ಮನು ಸಿಂಘ್ವಿ ಉತ್ತರಿಸಿ, ರಾಜ್ಯಪಾಲರ ಶೋಕಾಸ್ ನೋಟಿಸ್ ಗೆ ಉತ್ತರ ನೀಡಲಾಗಿದೆ. ಅಲ್ಲದೇ ಈ ಬಗ್ಗೆ ಒಂದು ಆಯೋಗ ಸಹ ರಚನೆಯಾಗಿದೆ. ಆ ಕಮಿಟಿ ಈಗಾಗಲೇ ತನಿಖೆ ನಡೆಸುತ್ತಿದೆ ಎಂದು ಹೇಳಿದರು.
ಮುರುಗೇಶ್ ನಿರಾಣಿ, ಜೊಲ್ಲೆ, ಜನಾರ್ದನ ರೆಡ್ಡಿ ಸೇರಿ ಹಲವ ವಿರುದ್ಧದ ಅರ್ಜಿಗಳು ಬಾಕಿ ಇದೆ. ಈ ಎಲ್ಲಾ ವಿಚಾರವನ್ನ ಕ್ಯಾಬಿನೆಟ್ ಸಲಹೆಯಲ್ಲಿ ಉಲ್ಲೇಖಿಸಲಾಗಿದೆ. ಹೊಸ ಬಿಎನ್ಎಸ್ ಕಾಯ್ದೆಯಡಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲಾಗಿದೆ. ಹೊಸ ಕಾಯಿದೆಯ ಬದಲಾವಣೆ ಎಂದರೆ 420, ಈಗ ವಂಚನೆ ಅಲ್ಲ. 17ಎ ಅಡಿ ಯಾವುದೇ ಪೊಲೀಸ್ ಅಧಿಕಾರಿ ಪ್ರಾಸಿಕ್ಯೂಷನ್ಗೆ ಅನುಮತಿ ಕೇಳಿಲ್ಲ. ಕರ್ತವ್ಯದ ಭಾಗವಾಗಿ ಸಿಎಂ ಮುಡಾ ಸೈಟ್ ಹಂಚಿಕೆಯಲ್ಲಿ ಯಾವುದೇ ತೀರ್ಮಾನ ಮಾಡಿಲ್ಲ. ವಿವೇಚನಾರಹಿತವಾಗಿ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ. ಈ ಮೂಲಕ ಸಂವಿಧಾನದ 163ನೇ ವಿಧಿಯನ್ನು ಉಲ್ಲಂಘನೆ ಮಾಡಿದ್ದಾರೆ.
ರಾಜ್ಯಪಾಲರ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು. ಕ್ಯಾಬಿನೆಟ್ ನಿರ್ಣಯದ ಉದ್ದೇಶ ಸಿಎಂ ಅನ್ನು ರಕ್ಷಿಸುವುದಾಗಿರಬಹುದು. ಹೀಗಾಗಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ವಿಚಾರದಲ್ಲಿ ರಾಜ್ಯಪಾಲರಿಗೆ ಸ್ವತಂತ್ರ ಅಧಿಕಾರವಿದೆ ಎಂದು ತಿಳಿಸಿದರು.
ಇದೇ ವೇಳೆ ವಕೀಲ ಪ್ರಭುಲಿಂಗ ನಾವದಗಿ ವಾದ ಮಂಡಿಸಿ, ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶಕ್ಕೆ ತಡೆ ನೀಡಬಾರದು ಎಂದು ಮನವಿ ಮಾಡಿದರು. ಈ ವೇಳೆ ಅಭಿಷೇಕ್ ಸಿಂಘ್ವಿ ಮಧ್ಯೆ ಪ್ರವೇಶಿಸಿ, ನಾಳೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಲ್ಲಿ ಆದೇಶ ಕಾಯ್ಡಿರಿಸಿದೆ. ಆದೇಶ ನೀಡಿದರೆ ಸಮಸ್ಯೆ ಆಗಲಿದೆ ಎಂದರು. ಈ ವೇಳೆ ಜಡ್ಜ್ ಪ್ರತಿಕ್ರಿಯಿಸಿ, ರಾಜ್ಯಪಾಲರ ಆದೇಶದ ಬಗ್ಗೆ ಸೆಷನ್ಸ್ ಕೋರ್ಟ್ ತೀರ್ಮಾನ ಮಾಡಲು ಸಾಧ್ಯವೇ? ಸಾಂವಿಧಾನಿಕ ವಿಚಾರವನ್ನು ಹೈಕೋರ್ಟ್ ತೀರ್ಮಾನ ಮಾಡಬೇಕು ಎಂದು ಹೇಳಿದರು. ಬಳಿಕ ಅರ್ಜಿ ವಿಚಾರಣೆಯನ್ನು ಆ.29ಕ್ಕೆ ಮುಂದೂಡಿದರು.


