ಮಂಗಳೂರು ; ಶ್ರೀ ಕದ್ರಿ ಮಂಜುನಾಥ ಸ್ವಾಮಿ, ಶ್ರೀ ಶರವು ಮಹಾಗಣಪತಿ, ಶ್ರೀ ಮಂಗಳಾದೇವಿಯ ಆಶೀರ್ವಾದದೊಂದಿಗೆ, ನಾಳೆ ಉರ್ವಾ ಮಾರಿಯಮ್ಮನ ಸಾನಿಧ್ಯದಲ್ಲಿ ನಿರ್ಮಾಣವಾಗಲಿರುವ ಕನ್ನಡ ಚಲನಚಿತ್ರ “ವಾದಿರಾಜ ವಾಲಗ ಮಂಡಳಿ” ಯ ಮುಹೂರ್ತ ನಾಳೆ ದಿ.21 ರಂದು ಶುಕ್ರವಾರ 9 ಗಂಟೆಗೆ ನಡೆಯಲಿದೆ ಎಂದು ನಿರ್ಮಾಪಕರಾದ ಡಾ.ಎಂ ಎನ್ ರಾಜೇಂದ್ರ ಕುಮಾರ್ ರವರು ತಿಳಿಸಿದ್ದಾರೆ.
ಎಂ.ಎನ್.ಆರ್ ಪ್ರೊಡಕ್ಷನ್ ಸಂಸ್ಥೆಯು 2009ರಲ್ಲಿ ಆರಂಭಗೊಂಡಿದ್ದು, “ಹೋಗುಳ” ಎಂಬ ಮೆಗಾ ಧಾರಾವಾಹಿಯನ್ನು ಕಿರುತೆರೆಗೆ ಅರ್ಪಿಸಿದೆ. ವಿನು ಬಳಂಜ ಅವರ ನಿರ್ದೇಶನದಲ್ಲಿ ಸುಮಾರು 600 ಕಂತುಗಳಲ್ಲಿ “ಜೀಕನ್ನಡ” ವಾಹಿನಿಯಲ್ಲಿ ಪ್ರಸಾರಗೊಂಡ ಈ ಧಾರಾವಾಹಿಯು ಹಾಗೇನೇ, ಪ್ರತಿಭಾವಂತ ನಿರ್ದೇಶಕ ಎಂ.ಡಿ.ಶ್ರೀಧರ ಅವರ ಜನಮೆಚ್ಚುಗೆಯನ್ನು ಪಡೆದಿರುತ್ತದೆ. ನಿರ್ದೇಶನದಲ್ಲಿ “ಗಲಾಟೆ” ಎಂಬ ಸಿನೆಮಾ ನಟ ಪ್ರಜ್ವಲ್ ದೇವರಾಜ್ ಹಾಗೂ ಬಹುತಾರಾಗಣದಲ್ಲಿ ನಿರ್ಮಾಣವಾಗಿದ್ದು, ಇದು ಬಹುಪಾಲು ವಿದೇಶದಲ್ಲಿ ಚಿತ್ರೀಕರಣಗೊಂಡಿದೆ. ಈ “ಗಲಾಟೆ” ಚಲನಚಿತ್ರ ‘ಎಂ.ಎನ್.ಆರ್ ಪ್ರೊಡಕ್ಷನ್’ ಸಂಸ್ಥೆಯ ಮೊದಲ ಚಲನಚಿತ್ರವಾಗಿದೆ ಎಂದರು.
‘ಎಂ.ಎನ್. ಆರ್ ಪ್ರೊಡಕ್ಷನ್’ ಸಂಸ್ಥೆ ತುಳುನಾಡಿನ ಸಂಸ್ಥೆಯಾಗಿರುವುದರಿಂದ ತುಳುಭಾಷೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈಗಾಗಲೇ ವಿಜಯಕುಮಾರ್ ಕೊಡಿಯಾಲ್ಬೈಲ್ ನಿರ್ದೇಶನದ “ಡಾಕ್ಟ್ರಾ ಭಟ್ರಾ?” ಎನ್ನುವ ತುಳು ಸಿನೆಮಾ ಮುಹೂರ್ತ ಮಾಡಲಾಗಿದ್ದು. ಈ ಸಿನೆಮಾ ಮುಂದಿನ ವರ್ಷ ತೆರೆಕಾಣಲಿದೆ ಎಂದರು.
ಈ ಮಧ್ಯೆ ಯುವ ನಿರ್ದೇಶಕರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಯುವ ನಿರ್ದೇಶಕ, ಕಾಂತಾರ ಸಿನೆಮಾದ “ವರಾಹ ರೂಪಂ” “ಕಾಂತಾರ-1” ರ “ಗೊತ್ತಿಲ್ಲಾ ಶಿವನೇ ಭಕ್ತಿ ದಾರಿಯು” ಹಾಡುಗಳನ್ನು ರಚಿಸಿರುವ ಶಶಿರಾಜ್ ರಾವ್ ಕಾವೂರು ರಚಿಸಿರುವ ಕಥೆ, ಚಿತ್ರಕಥೆ, ಸಂಭಾಷಣೆ, ನಿರ್ದೇಶನ ಇರುವ “ವಾದಿರಾಜ ವಾಲಗ ಮಂಡಳಿ” ಎಂಬ ಕನ್ನಡ ಸಿನೆಮಾವನ್ನು ತೆರೆಗೆ ಸಿದ್ಧಪಡಿಸುತ್ತಿದ್ದೇವೆ ಎಂದು ಹೇಳಿದರು.
ಈ ಸಿನೆಮಾ ಉತ್ತಮ ಕಥಾ ಹಂದರದಿಂದ ಸಂಪೂರ್ಣ ಹಾಸ್ಯ ಪ್ರಧಾನವಾಗಿದ್ದು. ಸಮಾಜಕ್ಕೆ ಒಳ್ಳೆಯ ಸಂದೇಶವನ್ನು ಕೂಡಾ ನೀಡುತ್ತದೆ ಎಂದರು.
ಸಿನೆಮಾದಲ್ಲಿ ನವೀನ್ ಡಿ ಪಡೀಲ್, ಲಕ್ಷ್ಮಣ ಕುಮಾರ್ ಮಲ್ಲೂರು, ಪ್ರಕಾಶ ತುಮಿನಾಡು, ದೀಪಕ್ ರೈ ಪಾಣಾಜೆ, ಪುಷ್ಪರಾಜ್ ಬೊಳ್ಳೂರ್, ಮೈಮ್ ರಾಮದಾಸ್, ಶೋಭರಾಜ್ ಪಾವೂರು, ತನ್ವಿ ರಾವ್, ವೇನ್ಯ ರೈ, ಚೈತ್ರಾ ಶೆಟ್ಟಿ. ಕೀರ್ತನಾ ಮುಂತಾದವರು ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ.
ಹಲವು ಹಿಟ್ ಕನ್ನಡ, ತಮಿಳು ಸಿನೆಮಾಗಳ ಛಾಯಾಚಿತ್ರಗಾರ ಎಸ್. ಚಂದ್ರಶೇಖರನ್, ಕ್ಯಾಮೆರಾದ ಹಿಂದೆ ತಮ್ಮ ಕೈಚಳಕ ತೋರಿಸಲಿರುವರು. ಚಿತ್ರಕ್ಕೆ ಸಂಗೀತ ಮಣಿಕಾಂತ ಕದ್ರಿಯವರಿದ್ದು. ಸಹ ನಿರ್ಮಾಪಕರಾಗಿ ಜಯಪ್ರಕಾಶ ತುಂಬೆ ಹಾಗೂ ಕಾರ್ಯಕಾರಿ ನಿರ್ಮಾಪಕರಾಗಿ ನಟ ಸಂತೋಷ್ ಶೆಟ್ಟಿ ಸಹಕರಿಸಲಿದ್ದಾರೆ. ಕಾಸರಗೋಡು, ಮಂಗಳೂರು, ಉಡುಪಿ, ಕುಂದಾಪುರ ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ನಿರ್ದೇಶಕ ಶಶಿರಾಜ್ ಕಾವೂರು,ಗೋಪಿನಾಥ್ ಭಟ್,ಜೆ.ಪಿ ಶೆಟ್ಟಿ,D.O.P ಚಂದ್ರ ಶೇಖರ್,ಸಂತೋಷ್ ಶೆಟ್ಟಿ,ಲಕ್ಣಣ್ ಕುಮಾರ್,ಸುನೀಲ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.


