ಮುಂಬೈ : ಮುಂಬೈನ ಮೀರಾ ರಸ್ತೆಯಲ್ಲಿ ಸೋಮವಾರ ರಾತ್ರಿ ನಡೆದ ಘಟನೆಯಲ್ಲಿ, ವ್ಯಕ್ತಿಯೊಬ್ಬ ಇಬ್ಬರು ಹಿಂದೂ ಸೆಕ್ಯೂರಿಟಿ ಗಾರ್ಡ್ಗಳ ಮೇಲೆ ಚಾಕುವಿನಿಂದ ದಾಳಿ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಆರೋಪಿ ಜೈಬ್ ಜುಬೈರ್ ಅನ್ಸಾರಿ (31), ಕಟ್ಟಡವೊಂದರಲ್ಲಿ ಕೆಲಸ ಮಾಡುತ್ತಿದ್ದ ಗಾರ್ಡ್ಗಳ ಧರ್ಮವನ್ನು ಕೇಳಿ, ಬಳಿಕ ‘ಇಸ್ಲಾಂ ಕಲ್ಮಾ’ ಪಠಿಸಲು ಒತ್ತಾಯಿಸಿದ್ದಾನೆ. ಅವರು ನಿರಾಕರಿಸಿದ ಹಿನ್ನೆಲೆ ಚಾಕುವಿನಿಂದ ಇರಿದಿದ್ದಾನೆ ಎಂದು ತಿಳಿದುಬಂದಿದೆ.
ರಾಜ್ಕುಮಾರ್ ಮಿಶ್ರಾರಿಗೆ ಗಂಭೀರ ಗಾಯಗಳಾಗಿದ್ದು ಮತ್ತೊಬ್ಬ ಸೆಕ್ಯೂರಿಟಿ ಗಾರ್ಡ್ ಸುಬ್ರೊತೋ ರಮೇಶ್ ಸೇನ್ ರವರು – ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಪ್ರಕರಣ ನಡೆದ ಕೇವಲ ಒಂದೂವರೆ ಗಂಟೆಯೊಳಗೆ ಮಹಾರಾಷ್ಟ್ರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಪ್ರಕರಣವನ್ನು ಭಯೋತ್ಪಾದನಾ ನಿಗ್ರಹ ದಳ (ATS) ತನಿಖೆಗೆ ಒಪ್ಪಿಸಲಾಗಿದೆ. ಆರೋಪಿ ಐಸಿಸ್ ಸಂಘಟನೆಯಲ್ಲಿ ಸೇರುವ ಉದ್ದೇಶ ಹೊಂದಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.
ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಉಗ್ರ ಸಂಪರ್ಕದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಶಿವಸೇನಾ ನಾಯಕ ಸಂಜಯ್ ನಿರುಪಮ್ ಕೂಡ ಸಂಪೂರ್ಣ ತನಿಖೆಗೆ ಒತ್ತಾಯಿಸಿದ್ದಾರೆ. ಧಾರ್ಮಿಕ ಒತ್ತಾಯದ ಹಿನ್ನೆಲೆ ನಡೆದ ಈ ದಾಳಿ ಘಟನೆ ಸಾರ್ವಜನಿಕ ಸುರಕ್ಷತೆ ಮತ್ತು ಸಾಮರಸ್ಯದ ಕುರಿತು ಚಿಂತನೆ ಮೂಡಿಸಿದೆ.


