ಧರ್ಮಸ್ಥಳ : ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಭಾರತದ ಉಪರಾಷ್ಟ್ರಪತಿ C. P. ರಾಧಾಕೃಷ್ಣನ್ ಅವರು ಸಮಾಜಮುಖಿ ಅಭಿವೃದ್ಧಿ, ಸೌಹಾರ್ದತೆ ಮತ್ತು ಮಾನವೀಯ ಮೌಲ್ಯಗಳ ಮಹತ್ವವನ್ನು ಒತ್ತಿ ಹೇಳಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ಸಾರ್ವಜನಿಕ ಸೇವಕರು ಹಾಗೂ ಸಮಾಜಮುಖಿ ನಾಯಕರ ಕನಸಿನ ಯೋಜನೆಯಾಗಿದ್ದು, ಇದು ಸಮಾಜಮುಖಿ ಅಭಿವೃದ್ಧಿಯ ಪ್ರತೀಕವಾಗಿದೆ ಎಂದು ಶ್ಲಾಘಿಸಿದರು.

“ಸಮಾಜ ನಿರ್ಮಾಣವೇ ರಾಷ್ಟ್ರ ನಿರ್ಮಾಣ” ಎಂಬ ಸಂದೇಶ ನೀಡಿದ ಉಪರಾಷ್ಟ್ರಪತಿಗಳು, ಸಮಾಜದ ಅಭಿವೃದ್ಧಿ ಮತ್ತು ಜನರ ಸಬಲೀಕರಣವೇ ದೇಶದ ಪ್ರಗತಿಗೆ ಮೂಲಾಧಾರವಾಗಿದೆ ಎಂದು ಹೇಳಿದರು. ಬಡವರ ಸೇವೆ, ಮಹಿಳಾ ಸಬಲೀಕರಣ ಹಾಗೂ ಸಮಾಜೋತ್ಥಾನಕ್ಕಾಗಿ ನಡೆಯುತ್ತಿರುವ ಕಾರ್ಯಗಳು ದೇಶಕ್ಕೆ ಮಾದರಿಯಾಗಬೇಕು ಎಂದು ಅವರು ಅಭಿಪ್ರಾಯಪಟ್ಟರು. ಯಾವುದೇ ವ್ಯಕ್ತಿಯ ಯಶಸ್ಸಿನ ಹಿಂದೆ ಕುಟುಂಬದ ಹಾಗೂ ಜೀವನ ಸಂಗಾತಿಯ ಸಹಕಾರ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಿರಿ ಸಂಸ್ಥೆಯ ಉತ್ಪನ್ನಗಳ ಗುಣಮಟ್ಟ ಮತ್ತು ಶ್ರೇಷ್ಠತೆಯನ್ನು ಮೆಚ್ಚಿದ ಉಪರಾಷ್ಟ್ರಪತಿಗಳು, ಸ್ಥಳೀಯ ಕೈಗಾರಿಕೆಗಳು ದೇಶದ ಆರ್ಥಿಕ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡುತ್ತಿವೆ ಎಂದು ಹೇಳಿದರು.
ಧರ್ಮ ಮತ್ತು ಆಧ್ಯಾತ್ಮಿಕತೆಯ ಕುರಿತೂ ಮಾತನಾಡಿದ ಅವರು, ಹಿಂದೂ ಧರ್ಮವು ಎಲ್ಲ ಧರ್ಮಗಳಲ್ಲಿನ ಉತ್ತಮ ಮೌಲ್ಯಗಳನ್ನು ಸ್ವೀಕರಿಸಲು ಪ್ರೇರೇಪಿಸುತ್ತದೆ ಎಂದು ಅಭಿಪ್ರಾಯಪಟ್ಟರು. ಧಾರ್ಮಿಕ ಮತಾಂತರದ ಕುರಿತು ಎಚ್ಚರಿಕೆ ನೀಡಿದ ಅವರು, ಎಲ್ಲಾ ಧರ್ಮಗಳೂ ಭಕ್ತಿ, ನೈತಿಕತೆ ಮತ್ತು ಮಾನವೀಯ ಮೌಲ್ಯಗಳನ್ನು ಬೋಧಿಸುತ್ತವೆ ಎಂದು ಹೇಳಿದರು.
ಸಮಾಜದಲ್ಲಿ ಸೌಹಾರ್ದತೆ, ಪರಸ್ಪರ ಗೌರವ ಹಾಗೂ ಮಾನವೀಯ ಮೌಲ್ಯಗಳ ಬೆಳವಣಿಗೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದ ಉಪರಾಷ್ಟ್ರಪತಿಗಳು, ಸಾಮಾಜಿಕ ಏಕತೆ ಮತ್ತು ಸಾಂಸ್ಕೃತಿಕ ಮೌಲ್ಯಗಳ ಸಂರಕ್ಷಣೆಯ ಅಗತ್ಯವನ್ನು ಒತ್ತಿ ಹೇಳಿದರು. ಉಪರಾಷ್ಟ್ರಪತಿಯ ಈ ಭಾಷಣಕ್ಕೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರು ಹಾಗೂ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.
ವೇದಿಕೆಯಲ್ಲಿ ಕರ್ನಾಟಕ ರಾಜ್ಯದ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ,ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಡೆ,ಶ್ರೀಮತಿ ಹೇಮಾವತಿ ವಿ ಹೆಗ್ಗಡೆ,ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ,ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪ್ ಸಿಂಹ ನಾಯಕ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.


