ಬೆಂಗಳೂರು : ತಾಯಿ ಹಾಗೂ ಆಕೆಯ ಪ್ರಿಯಕರ ಸೇರಿ ಆರು ವರ್ಷದ ಬಾಲಕಿಯನ್ನು ಕೊಲೆ ಮಾಡಿರುವ ಆರೋಪದ ಪ್ರಕರಣವೊಂದು ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಘಟನೆ ನಡೆದ ಮೂರು ತಿಂಗಳ ಬಳಿಕ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಪೊಲೀಸರು ಕೊಲೆ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.
ಮೃತ ಬಾಲಕಿಯನ್ನು ವೆನ್ನಿಲಾ (6) ಎಂದು ಗುರುತಿಸಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ, ಬಾಲಕಿಯ ತಾಯಿ ಪ್ರಿಯಾಂಕಾ ಮತ್ತು ಪತಿ ಪ್ರವೀಣ್ 2007ರಲ್ಲಿ ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದರು. ಈ ನಡುವೆ ಪ್ರಿಯಾಂಕಾ ಅವರಿಗೆ ಕಾಲೇಜು ಸ್ನೇಹಿತ ಮೋಹನ್ ಪರಿಚಯವಾಗಿದ್ದು, ಬಳಿಕ ಇಬ್ಬರ ನಡುವೆ ಆತ್ಮೀಯತೆ ಬೆಳೆದಿತ್ತು ಎನ್ನಲಾಗಿದೆ.
ಮಾರ್ಚ್ 24ರಂದು ಬಾಲಕಿ ಮೃತಪಟ್ಟಿರುವುದಾಗಿ ಕುಟುಂಬಕ್ಕೆ ಮಾಹಿತಿ ನೀಡಲಾಗಿತ್ತು. ಆರಂಭದಲ್ಲಿ ಮಗುವು ಬಿರಿಯಾನಿ ಸೇವಿಸಿದ ಬಳಿಕ ಅಸ್ವಸ್ಥಗೊಂಡು ಮೃತಪಟ್ಟಿದೆ ಎಂದು ಹೇಳಲಾಗಿತ್ತು. ನಂತರ ಐಸ್ಕ್ರೀಮ್ ನೀಡಿ ಕಾರಿನಲ್ಲಿ ಮಲಗಿಸಿದ್ದ ವೇಳೆ ಸಾವನ್ನಪ್ಪಿದೆ ಎಂಬ ಮತ್ತೊಂದು ವಿವರಣೆ ನೀಡಲಾಗಿತ್ತು ಎಂದು ವರದಿಯಾಗಿದೆ.
ಈ ವಿವರಣೆಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಬಾಲಕಿಯ ತಂದೆ ಪ್ರವೀಣ್, ಮರಣೋತ್ತರ ಪರೀಕ್ಷೆ ವರದಿಯನ್ನು ವೈದ್ಯರೊಬ್ಬರಿಗೆ ಪರಿಶೀಲನೆಗಾಗಿ ಕಳುಹಿಸಿದ್ದರು. ವರದಿಯಲ್ಲಿ ಅನುಮಾನಾಸ್ಪದ ಅಂಶಗಳಿರುವ ಸಾಧ್ಯತೆ ಕುರಿತು ಅಭಿಪ್ರಾಯ ವ್ಯಕ್ತವಾದ ಬಳಿಕ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದು, ಪ್ರಿಯಾಂಕಾ ಅವರ ಸ್ನೇಹಿತ ಮೋಹನ್ ಅವರನ್ನು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಎಂದು ಪರಿಗಣಿಸಲಾಗಿರುವ ಪ್ರಿಯಾಂಕಾ ತಲೆಮರೆಸಿಕೊಂಡಿದ್ದು, ಅವರ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ. ಪೊಲೀಸರು ಫರೆನ್ಸಿಕ್ ಸೈನ್ಸ್ ಲ್ಯಾಬೊರೇಟರಿ (FSL) ವರದಿಗಾಗಿ ಕಾಯುತ್ತಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.


