ಚಿಕ್ಕಮಗಳೂರು : ಭದ್ರಾ ವನ್ಯಜೀವಿ ವಿಭಾಗದ ಸಿಬ್ಬಂದಿಯೊಬ್ಬರ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಸಿದ್ದರಾಮಯ್ಯ ಸೇತುವೆ ಸಮೀಪದ ಮೋರಿಮಠ ಬಳಿ ನಡೆದಿದೆ.
ಭದ್ರಾ ಬ್ಯಾಕ್ವಾಟರ್ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಫಾರೆಸ್ಟ್ ವಾಚರ್ ಮೇಲೆ ಕಾಡಾನೆ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ವಾಚರ್ ಅವರನ್ನು ತಕ್ಷಣ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭದ್ರಾ ಬ್ಯಾಕ್ವಾಟರ್ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಬೀಡು ಬಿಟ್ಟಿದ್ದು, ಈ ಭಾಗದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಿರಂತರ ನಿಗಾವಹಿಸುತ್ತಿದ್ದಾರೆ.
ಎನ್.ಆರ್.ಪುರ ಪಟ್ಟಣದಿಂದ ಕೇವಲ 10 ಕಿಲೋಮೀಟರ್ ದೂರದಲ್ಲೇ ಕಾಡಾನೆಗಳ ಹಿಂಡು ನೆಲೆಸಿರುವುದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಘಟನೆಯ ಕುರಿತು ಅರಣ್ಯ ಇಲಾಖೆ ಹೆಚ್ಚಿನ ಮಾಹಿತಿ ಕಲೆಹಾಕುತ್ತಿದೆ.

