ಕಡಬ: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಆಲಂಕಾರು ಗ್ರಾಮದ ಕಜೆ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ದಂಪತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಹೃದಯವಿದ್ರಾವಕ ಘಟನೆ ಶನಿವಾರ ಬೆಳಕಿಗೆ ಬಂದಿದೆ.
ಮೃತರನ್ನು ಮೂಲತಃ ಕಾರ್ಕಳದ ಬಜಗೋಳಿ ನಿವಾಸಿ ದಿನೇಶ್ ಹಾಗೂ ಸಿದ್ದಕಟ್ಟೆಯ ಸಂಗೀತ ಎಂದು ಗುರುತಿಸಲಾಗಿದೆ. ದಂಪತಿಗೆ ಎರಡು ವರ್ಷದ ಹೆಣ್ಣು ಮಗು ಇದ್ದು, ಈ ದುರ್ಘಟನೆಯಿಂದ ಮಗು ಅನಾಥವಾಗಿದೆ.
ದಂಪತಿ ಆಲಂಕಾರು ಪೇಟೆಯಲ್ಲಿ ಹೋಟೆಲ್ ನಡೆಸುತ್ತಿದ್ದು, ಕಜೆ ಪ್ರದೇಶದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಕೆಲ ತಿಂಗಳ ಹಿಂದೆ ಆಲಂಕಾರನ್ನು ತೊರೆದಿದ್ದ ಇವರು ಶುಕ್ರವಾರವಷ್ಟೇ ಮತ್ತೆ ಬಾಡಿಗೆ ಮನೆಗೆ ವಾಪಸ್ ಬಂದಿದ್ದರು ಎನ್ನಲಾಗಿದೆ.
ಶನಿವಾರ ಘಟನೆ ನಡೆದ ವೇಳೆ ಮನೆಯ ಬಾಗಿಲು ಒಳಗಿನಿಂದ ಚಿಲಕ ಹಾಕಲಾಗಿತ್ತು ಎಂದು ತಿಳಿದುಬಂದಿದೆ. ಪತ್ನಿ ಸಂಗೀತಳನ್ನು ಪತಿ ದಿನೇಶ್ ಕೊಲೆಗೈದು, ಬಳಿಕ ತಾನೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂಬ ಪ್ರಾಥಮಿಕ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
ಘಟನಾ ಸ್ಥಳಕ್ಕೆ ಕಡಬ ಪೊಲೀಸ್ ಠಾಣೆಯ ಉಪನಿರೀಕ್ಷಕ ಜಂಬೂರಾಜ್ ಮಹಾಜನ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದಂಪತಿಯ ಸಾವಿಗೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

