ಧಾರವಾಡ : ಮಾಜಿ ಸಚಿವ ಹಾಗೂ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ದೋಷಿ ತೀರ್ಪಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು, ಶಿಕ್ಷೆಯನ್ನು ಅಮಾನತುಗೊಳಿಸಿ ಜಾಮೀನು ಮಂಜೂರು ಮಾಡಿದೆ.
ಇದಕ್ಕೆ ಪ್ರತಿಕ್ರಿಯಿಸಿರುವ ಹೋರಾಟಗಾರ ಬಸವರಾಜ್ ಕೊರವರ್, “ಹೈಕೋರ್ಟ್ ಯಾವ ಆಧಾರದ ಮೇಲೆ ತಡೆಯಾಜ್ಞೆ ನೀಡಿದೆ ಎಂಬುದು ಆದೇಶದ ಪ್ರತಿ ನೋಡಿದ ಬಳಿಕ ತಿಳಿಯಲಿದೆ. ನಾವು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸುತ್ತೇವೆ. ಗುರುನಾಥ್ ಗೌಡರ ಕುಟುಂಬದ ಪರವಾಗಿ ಕಾನೂನು ಹೋರಾಟ ಮುಂದುವರಿಸುತ್ತೇವೆ” ಎಂದು ಹೇಳಿದ್ದಾರೆ.
“ಈ ಪ್ರಕರಣದಲ್ಲಿ ಸಾಕ್ಷಿಗಳ ಮೇಲೆ ಪ್ರಭಾವ ಬೀರಿರುವ ಕುರಿತು ಸಾಕಷ್ಟು ದಾಖಲೆಗಳಿದ್ದವು. ಆದರೂ ಹೈಕೋರ್ಟ್ ತಡೆಯಾಜ್ಞೆ ನೀಡಿರುವುದು ಬೇಸರ ತಂದಿದೆ. ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆ” ಎಂದು ಅವರು ತಿಳಿಸಿದ್ದಾರೆ.


