ಚಿಕ್ಕಮಗಳೂರು : ಮಳೆ ಪ್ರಮಾಣ ಕಡಿಮೆಯಾಗಿದ್ದರೂ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಅಪಾಯದ ಪರಿಸ್ಥಿತಿ ಮುಂದುವರಿದಿದೆ. ಚಿಕ್ಕಮಗಳೂರು ತಾಲೂಕಿನ ಚನ್ನಗೋಡನಹಳ್ಳಿ ಸಮೀಪ ಮುಳ್ಳಯ್ಯನಗಿರಿ-ದತ್ತಪೀಠ ಮಾರ್ಗದಲ್ಲಿ ಸಂಚರಿಸುತ್ತಿದ್ದ ಪ್ರವಾಸಿಗರ ಬೈಕ್ ಮೇಲೆ ಮರ ಬಿದ್ದ ಘಟನೆ ನಡೆದಿದೆ.
ಅದೃಷ್ಟವಶಾತ್ ಮರದ ತುದಿಭಾಗ ಮಾತ್ರ ಬೈಕ್ ಮೇಲೆ ಬಿದ್ದ ಕಾರಣ ಸವಾರ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆಯಿಂದ ಕೆಲಕಾಲ ರಸ್ತೆ ಸಂಚಾರಕ್ಕೂ ಅಡಚಣೆ ಉಂಟಾಯಿತು. ಭಾರೀ ಗಾಳಿಯಿಂದ ಮರ ಬುಡಸಮೇತ ಉರುಳಿರುವುದು ತಿಳಿದುಬಂದಿದೆ. ಮುಳ್ಳಯ್ಯನಗಿರಿ-ದತ್ತಪೀಠ ಭಾಗದಲ್ಲಿ ನಿರಂತರ ಮಳೆಯಿಂದ ಭೂಮಿಯ ತೇವಾಂಶ ಹೆಚ್ಚಾಗಿದ್ದು, ಹಲವೆಡೆ ಗುಡ್ಡ ಕುಸಿತ ಹಾಗೂ ಮರ ಬೀಳುವ ಘಟನೆಗಳು ವರದಿಯಾಗುತ್ತಿವೆ.
ಈ ಹಿನ್ನೆಲೆಯಲ್ಲಿ ಮುಳ್ಳಯ್ಯನಗಿರಿ-ದತ್ತಪೀಠಕ್ಕೆ ಭೇಟಿ ನೀಡುವ ಪ್ರವಾಸಿಗರು ಹಾಗೂ ವಾಹನ ಸವಾರರು ಅತ್ಯಂತ ಎಚ್ಚರಿಕೆಯಿಂದ ಸಂಚರಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

