ಬೀದರ್ : ಚಾಮರಾಜನಗರ ಜಿಲ್ಲೆಯಲ್ಲಿ ಬೇಟೆಗಾರರ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಬೀದರ್ನಲ್ಲಿ ಜಿಂಕೆ ಬೇಟೆಯಾಡಿದ ಆರೋಪದ ಮೇಲೆ ಮೂವರು ಬೇಟೆಗಾರರನ್ನು ಪೊಲೀಸರು ಬಂಧಿಸಿದ್ದಾರೆ.


ಬೀದರ್ ತಾಲೂಕಿನ ಚೊಂಡಿ ಗ್ರಾಮದ ಸುತ್ತಮುತ್ತ ಪ್ರದೇಶದಲ್ಲಿ ಜಿಂಕೆ ಬೇಟೆಯಾಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಬೇಟೆಗಾರರ ಚಲನವಲನದ ಬಗ್ಗೆ ಗ್ರಾಮಸ್ಥರು ಜನವಾಡ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಮಾಹಿತಿ ಆಧರಿಸಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿದಾಗ ಬೇಟೆಗಾರರು ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಮೂವರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಇನ್ನಿಬ್ಬರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಬಂಧಿತರನ್ನು ಕಲಬುರಗಿ ಜಿಲ್ಲೆಯ ಚಿಂಚೋಳಿ ಮೂಲದ ಸೋಹೆಬ್ ಮಲ್ಲಿಕ್ ಹಾಗೂ ಹೈದ್ರಾಬಾದ್ ಮೂಲದ ಅಬ್ದುಲ್ ಸಾಹಿದ್ ಮತ್ತು ಹಮೀದ್ ಎಂದು ಗುರುತಿಸಲಾಗಿದೆ.
ಹೈದ್ರಾಬಾದ್ ಮೂಲದ ನಾಸೀರ್ ಸೇರಿದಂತೆ ಇನ್ನಿಬ್ಬರು ಬೇಟೆಗಾರರು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಬೇಟೆಗೆ ಬಳಸಿದ್ದ ಬಂದೂಕು ಹಾಗೂ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಒಂದು ಜಿಂಕೆಯನ್ನು ಬೇಟೆಯಾಡಿದ್ದರೆಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಘಟನೆ ಜನವಾಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪರಾರಿಯಾಗಿರುವ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ.

