ತುಮಕೂರು : ತುಮಕೂರಿನ ಹಿರಿಯ ರಾಜಕಾರಣಿ, ಮಾಜಿ ಸಚಿವ ಹಾಗೂ ತಿಪಟೂರು ಕ್ಷೇತ್ರದ ಮಾಜಿ ಶಾಸಕ ಬಿ.ಸಿ. ನಾಗೇಶ್ ಅವರು 67ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಜಯನಗರದಲ್ಲಿರುವ ಮಗಳ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ತಿಪಟೂರು ವಿಧಾನಸಭಾ ಕ್ಷೇತ್ರವನ್ನು ಎರಡು ಬಾರಿ ಪ್ರತಿನಿಧಿಸಿದ್ದ ಬಿ.ಸಿ. ನಾಗೇಶ್ ಅವರು ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದರು.
ಬಿ.ಇ. ಇಂಜಿನಿಯರಿಂಗ್ ಪದವೀಧರರಾಗಿದ್ದ ನಾಗೇಶ್ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಕಟ್ಟಾಳುವಾಗಿ ಗುರುತಿಸಿಕೊಂಡಿದ್ದರು. ತಿಪಟೂರು ಭಾಗದಲ್ಲಿ ಬಿಜೆಪಿಯನ್ನು ಸಂಘಟಿಸಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿಯೂ ತಮ್ಮದೇ ಆದ ಛಾಪು ಮೂಡಿಸಿದ್ದ ಅವರು, ಸರಳ ನಡೆ-ನುಡಿ ಹಾಗೂ ಪಕ್ಷ ಸಂಘಟನೆಯ ಮೂಲಕ ಗಮನ ಸೆಳೆದಿದ್ದರು.
ಬಿ.ಸಿ. ನಾಗೇಶ್ ಅವರ ನಿಧನಕ್ಕೆ ತುಮಕೂರು ಜಿಲ್ಲೆಯ ರಾಜಕೀಯ ಗಣ್ಯರು, ಬಿಜೆಪಿ ಮುಖಂಡರು ಹಾಗೂ ಸಾರ್ವಜನಿಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ನಾಗೇಶ್ ಅವರ ಪಾರ್ಥಿವ ಶರೀರವನ್ನು ತಿಪಟೂರಿಗೆ ರವಾನಿಸಲು ಕುಟುಂಬಸ್ಥರು ಅಗತ್ಯ ಸಿದ್ಧತೆ ನಡೆಸುತ್ತಿದ್ದಾರೆ.

