ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದ್ ಮಿಲಾದ್ ಅಂಗವಾಗಿ ನೀಡಲಾಗಿರುವ ಸಾರ್ವತ್ರಿಕ ರಜೆಯನ್ನು ಆಗಸ್ಟ್ 26ರಿಂದ ಆಗಸ್ಟ್ 25ಕ್ಕೆ ಬದಲಾಯಿಸುವಂತೆ ಮುಸ್ಲಿಂ ಮುಖಂಡರು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹಾಗೂ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಅವರಿಗೆ ಮನವಿ ಸಲ್ಲಿಸಿದ್ದಾರೆ.
ಇಸ್ಲಾಮಿಕ್ ತಿಂಗಳ ಆರಂಭದ ಚಂದ್ರದರ್ಶನದಲ್ಲಿ ವ್ಯತ್ಯಾಸವಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಖಾಝಿಗಳು ಈ ಬಾರಿ ಈದ್ ಮಿಲಾದ್ ಕಾರ್ಯಕ್ರಮವನ್ನು ಆಗಸ್ಟ್ 25ರಂದು ಆಚರಿಸಲು ನಿರ್ಧರಿಸಿದ್ದಾರೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಆ.25ರಂದು ಜಿಲ್ಲೆಯ ವಿವಿಧ ಮಸೀದಿಗಳ ವ್ಯಾಪ್ತಿಯಲ್ಲಿ ಮೆರವಣಿಗೆ, ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ.
ಹೀಗಾಗಿ ಅದೇ ದಿನ ಸಾರ್ವತ್ರಿಕ ರಜೆ ಘೋಷಿಸುವಂತೆ ಮನವಿ ಮಾಡಲಾಗಿದೆ. ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿ ಮಾಜಿ ಅಧ್ಯಕ್ಷ ಬಿ.ಎ. ಅಬ್ದುಲ್ ನಾಸೀರ್ ಲಕಿಸ್ಟಾರ್, ಮಂಗಳೂರು ಕೇಂದ್ರ ಜುಮಾ ಮಸೀದಿ ಆಡಳಿತ ಸಮಿತಿ ಅಧ್ಯಕ್ಷ ಯೆನೆಪೋಯ ಅಬ್ದುಲ್ಲ ಕುನ್ಹಿ ಹಾಗೂ ಉಳ್ಳಾಲ ಸಯ್ಯಿದ್ ಮದನಿ ದರ್ಗಾ ಶರೀಫ್ ಅಧ್ಯಕ್ಷ ಹಾಜಿ ಜಿ. ಹನೀಫ್ ಜಂಟಿಯಾಗಿ ಮನವಿ ಸಲ್ಲಿಸಿದ್ದಾರೆ.

