ಮಂಗಳೂರು : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಇಬ್ಬರು ಮಕ್ಕಳನ್ನು ಬಾವಿಗೆ ಎಸೆದಿರುವ ಆರೋಪ ದಕ್ಷಿಣ ಕನ್ನಡ ಜಿಲ್ಲೆಯ ಪೆರ್ನೆಯಲ್ಲಿ ನಡೆದಿದೆ. ಘಟನೆಯಲ್ಲಿ ಮೂರು ವರ್ಷದ ಮಗು ಮೃತಪಟ್ಟಿದ್ದು, ಮತ್ತೊಂದು ಮಗು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ನೆ ನಿವಾಸಿಗಳಾದ ಸಿನಾನ್ (32) ಹಾಗೂ ನೂರುನ್ನಿಸಾ (28) ದಂಪತಿ ನಡುವೆ ಫೋನ್ ಕರೆಯಲ್ಲಿ ವೈವಾಹಿಕ ವಿಚಾರವಾಗಿ ಗಲಾಟೆ ನಡೆದಿತ್ತು ಎನ್ನಲಾಗಿದೆ. ಈ ವೇಳೆ ಕೋಪಗೊಂಡ ನೂರುನ್ನಿಸಾ, ಮನೆಯಲ್ಲಿದ್ದ ತನ್ನ ಸುಮಾರು ಮೂರುವರೆ ವರ್ಷದ ಮಗು ಹಾಗೂ ಪತಿಯ ತಂಗಿಯ ಸುಮಾರು ಮೂರು ವರ್ಷದ ಮಗುವನ್ನು ಮನೆಯ ಸಮೀಪದ ಬಾವಿಗೆ ಎಸೆದಿದ್ದಾರೆ ಎಂದು ಆರೋಪಿಸಲಾಗಿದೆ.
ಮಕ್ಕಳು ಬಾವಿಗೆ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ಕಾರ್ಯಪ್ರವೃತ್ತರಾಗಿ ಇಬ್ಬರನ್ನೂ ಮೇಲಕ್ಕೆತ್ತಿದ್ದಾರೆ. ಆದರೆ ಪತಿಯ ತಂಗಿಯ ಮಗು ಮೃತಪಟ್ಟಿದ್ದು, ನೂರುನ್ನಿಸಾ ಅವರ ಮಗುವನ್ನು ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರಂ. 121/2026ರಂತೆ ಪ್ರಕರಣ ದಾಖಲಾಗಿದೆ. ನೂರುನ್ನಿಸಾಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಯ ನಿಖರ ಕಾರಣ ಹಾಗೂ ಇತರೆ ವಿವರಗಳ ಕುರಿತು ಪೊಲೀಸ್ ತನಿಖೆ ಮುಂದುವರಿದಿದೆ.

