ಚಿಕ್ಕಮಗಳೂರು : ಜಿಲ್ಲೆಯ ಕಡೂರು ತಾಲೂಕಿನ ಬಿಸ್ಲೆರೆ ಗ್ರಾಮದಲ್ಲಿ ಶಾಲೆಯ ಶಿಕ್ಷಕನೊಬ್ಬ ಮೂವರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು, ಪ್ರಕರಣವನ್ನು ಕಾನೂನು ಕ್ರಮಕ್ಕೆ ಒಳಪಡಿಸದೆ ಸ್ಥಳೀಯ ಮಟ್ಟದಲ್ಲೇ ಇತ್ಯರ್ಥಪಡಿಸಲು ಯತ್ನ ನಡೆದಿರುವ ಆರೋಪವೂ ಕೇಳಿಬಂದಿದೆ.
ಆರೋಪಿತ ಶಿಕ್ಷಕ ಮಕ್ಕಳಿಗೆ ಅಶ್ಲೀಲ ವಿಡಿಯೋಗಳನ್ನು ತೋರಿಸಿ, ಅಸಭ್ಯ ಹಾಗೂ ವಿಚಿತ್ರ ಪ್ರಶ್ನೆಗಳನ್ನು ಕೇಳಿದ್ದಾನೆ ಎನ್ನಲಾಗಿದೆ. ಘಟನೆ ಬೆಳಕಿಗೆ ಬಂದ ಬಳಿಕ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ, ಬಿಇಒ, ಪೊಲೀಸ್ ಅಧಿಕಾರಿಗಳು ಹಾಗೂ ಎಸ್ಡಿಎಂಸಿ ಸದಸ್ಯರ ಸಭೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಈ ವೇಳೆ ಪ್ರಕರಣವನ್ನು ಸ್ಥಳೀಯ ಮಟ್ಟದಲ್ಲೇ ಇತ್ಯರ್ಥಪಡಿಸಿಕೊಳ್ಳಲು ಕೆಲವರು ಒತ್ತಾಯಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಇದೇ ವಿಚಾರದಲ್ಲಿ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದ ತಿಪ್ಪೇಶ್ ಎಂಬುವರ ಮೇಲೆ ನಂದೀಶ್ ಎಂಬಾತ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದ್ದು, ಗಾಯಗೊಂಡ ತಿಪ್ಪೇಶ್ ಅವರನ್ನು ಕಡೂರು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಘಟನೆ ಸಂಬಂಧ ಯಗಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


