ನವದೆಹಲಿ : ದೆಹಲಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಳಗಾವಿ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಅಭಯ ಪಾಟೀಲ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಪಘಾತದಲ್ಲಿ ಶಾಸಕರಿಗೆ ಚಿಕ್ಕಪುಟ್ಟ ಗಾಯಗಳಾಗಿವೆ.
ನಿನ್ನೆ ರಾತ್ರಿ ದೆಹಲಿಯ PWD ಕಚೇರಿ ಬಳಿ ಕಾರು ಮತ್ತು ಇನ್ನೋವಾ ನಡುವೆ ಅಪಘಾತ ಸಂಭವಿಸಿದೆ.
ಇನ್ನೋವಾದಲ್ಲಿ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ್ ಹಾಗೂ ಕಿರಾರಿ ಕ್ಷೇತ್ರದ ಬಿಜೆಪಿ ಶಾಸಕ ಅನಿಲ್ ಝಾ ಪ್ರಯಾಣಿಸುತ್ತಿದ್ದರು. ಇವರಿಗೂ ಗಾಯಗಳಾಗಿವೆ.
ನಿಯಂತ್ರಣ ತಪ್ಪಿದ ಕಾರು ಮೊದಲು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬಳಿಕ ಶಾಸಕರು ಪ್ರಯಾಣಿಸುತ್ತಿದ್ದ ಇನ್ನೋವಾಗೆ ಗುದ್ದಿದೆ. ಲಕ್ಷ್ಮೀನಗರದಿಂದ ITO ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ಆಶುತೋಷ್ ಪಾಂಡೆ, ಅವರ ಪತ್ನಿ ಹಾಗೂ ಇಬ್ಬರು ಮಕ್ಕಳು ಇದ್ದರು. ಅಪಘಾತದಲ್ಲಿ ಇವರಿಗೆ ಗಂಭೀರ ಗಾಯಗಳಾಗಿವೆ.
ಅಪಘಾತದ ಬಳಿಕ ಗಾಯಾಳುಗಳನ್ನು ತಕ್ಷಣ ದೆಹಲಿಯ LNJP ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ದೆಹಲಿಯ I.P. ಎಸ್ಟೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

