ಬಂಟ್ವಾಳ : ಮೆಹಂದಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ್ತಿದ್ದ ನಿರೂಪಕರೊಬ್ಬರು ವೇದಿಕೆಯಲ್ಲೇ ಕುಸಿದು ಬಿದ್ದು ಮೃತಪಟ್ಟ ದಾರುಣ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಫರಂಗಿಪೇಟೆ ಅಬ್ಬೆಟ್ಟು ನಿವಾಸಿ ಅಶ್ವಿತ್ (32) ಮೃತ ದುರ್ದೈವಿ. ಇವರು ಸ್ಥಳೀಯವಾಗಿ ಪ್ರತಿಭಾವಂತ ನಿರೂಪಕರಾಗಿ ಗುರುತಿಸಿಕೊಂಡಿದ್ದರು.
ನಾಯಿಲದಲ್ಲಿರುವ ಸಂಬಂಧಿಕರ ಮನೆಯಲ್ಲಿ ನಡೆದ ಮದರಂಗಿ (ಮೆಹಂದಿ) ಕಾರ್ಯಕ್ರಮದಲ್ಲಿ ಅಶ್ವಿತ್ ಅವರಿಗೆ ನಿರೂಪಣೆಯ ಜವಾಬ್ದಾರಿ ನೀಡಲಾಗಿತ್ತು. ಅದರಂತೆ ಅವರು ರಾತ್ರಿ ಉತ್ಸಾಹದಿಂದ ವೇದಿಕೆ ಏರಿ ಕಾರ್ಯಕ್ರಮದ ನಿರೂಪಣೆ ಆರಂಭಿಸಿದ್ದರು.
ಆದರೆ, ಮಾತು ಆರಂಭಿಸಿದ ಕೆಲವೇ ನಿಮಿಷಗಳಲ್ಲಿ ಅಸ್ವಸ್ಥಗೊಂಡು ಇದ್ದಕ್ಕಿದ್ದಂತೆ ವೇದಿಕೆಯಲ್ಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಘಟನೆಯಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರಲ್ಲಿ ಆತಂಕ ಹಾಗೂ ದುಃಖದ ವಾತಾವರಣ ನಿರ್ಮಾಣವಾಯಿತು.


