ಬಾಗಲಕೋಟೆ : ಜಿಲ್ಲೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ ತಡರಾತ್ರಿ ನಿಲ್ಲಿಸಿದ್ದ XUV300 ಕಾರು ಏಕಾಏಕಿ ಸ್ಫೋಟಗೊಂಡು ಸಂಪೂರ್ಣ ಛಿದ್ರಛಿದ್ರಗೊಂಡ ಘಟನೆ ನಡೆದಿದೆ. ಈ ಘಟನೆಯಲ್ಲಿ ವೈನ್ ಶಾಪ್ ಮಾಲೀಕ ಹಣಮಂತ ಅಥಣಿ ಅವರು ಭಾರೀ ಅನಾಹುತದಿಂದ ಪಾರಾಗಿದ್ದಾರೆ.


ರಾತ್ರಿ ಸುಮಾರು 10:30ರ ವೇಳೆಗೆ ನಡೆದ ಸ್ಫೋಟದಲ್ಲಿ ಜಯಶ್ರೀ ಹಣಮಂತ ಅಥಣಿ ಅವರ ಹೆಸರಿನಲ್ಲಿದ್ದ XUV300 ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ವಾಹನವನ್ನು ಮೂರು ವರ್ಷಗಳ ಹಿಂದೆ ಪತ್ನಿಯ ಹೆಸರಿನಲ್ಲಿ ಖರೀದಿಸಲಾಗಿತ್ತು ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಬಾಗಲಕೋಟೆ ಹಾಗೂ ಬೆಳಗಾವಿ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಿರಿಯ ಪೊಲೀಸ್ ಅಧಿಕಾರಿಗಳೂ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.
ಸ್ಫೋಟಕ್ಕೆ ನಿಖರ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರು, ಸ್ಫೋಟದ ಹಿಂದಿನ ಕಾರಣವನ್ನು ಪತ್ತೆಹಚ್ಚಲು ಮುಂದಾಗಿದ್ದಾರೆ. ಘಟನೆಯಿಂದ ಹಿಪ್ಪರಗಿ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.


