ಬೆಂಗಳೂರು : ಅಪಾರ್ಟ್ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆ ಹಾಗೂ ಅವರ ಸಮಸ್ಯೆಗಳ ಪರಿಹಾರಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಕರ್ನಾಟಕ ಅಪಾರ್ಟ್ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ)–2026 ಕುರಿತಂತೆ ಅಪಾರ್ಟ್ಮೆಂಟ್ ಸಂಘಗಳ ಪ್ರತಿನಿಧಿಗಳೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದ ಅವರು, ಆಗಸ್ಟ್ 6ರವರೆಗೆ ಸಾರ್ವಜನಿಕರು ತಮ್ಮ ಸಲಹೆ-ಸೂಚನೆಗಳನ್ನು ಸಲ್ಲಿಸಬಹುದು ಎಂದು ಹೇಳಿದರು.
ವಿಧೇಯಕವನ್ನು ಏಕಪಕ್ಷೀಯವಾಗಿ ಜಾರಿಗೆ ತರುವ ಉದ್ದೇಶ ಸರ್ಕಾರಕ್ಕಿಲ್ಲ. ಮನೆ ಖರೀದಿಸಿದ ನಂತರ ಅದರ ಸಂಪೂರ್ಣ ಮಾಲೀಕರು ಖರೀದಿದಾರರೇ ಆಗಿದ್ದು, ಅವರ ಹಕ್ಕುಗಳಿಗೆ ಯಾವುದೇ ಧಕ್ಕೆಯಾಗದಂತೆ ಕಾನೂನು ರೂಪಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
ತಮ್ಮ ಅಪಾರ್ಟ್ಮೆಂಟ್ನಲ್ಲಿಯೇ ನೋಂದಣಿಗೂ ಮುನ್ನ ತಮ್ಮ ಹೆಸರನ್ನು ನೋಟಿಸ್ ಬೋರ್ಡ್ನಲ್ಲಿ ಹಾಕಿದ್ದ ಘಟನೆ ನೆನಪಿಸಿಕೊಂಡ ಡಿ.ಕೆ. ಶಿವಕುಮಾರ್, ಕೆಲ ಅಪಾರ್ಟ್ಮೆಂಟ್ ಸಂಘಗಳಲ್ಲಿ ಅನಗತ್ಯ ವಿವಾದಗಳು ಸೃಷ್ಟಿಯಾಗುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಎಸ್ಟಿಪಿ, ಕುಡಿಯುವ ನೀರಿನ ವ್ಯವಸ್ಥೆ, ದಾಖಲೆಗಳ ವರ್ಗಾವಣೆ ಸೇರಿದಂತೆ ನಿವಾಸಿಗಳ ಸಮಸ್ಯೆಗಳನ್ನು ಆದ್ಯತೆಯಾಗಿ ಪರಿಹರಿಸಲಾಗುವುದು ಎಂದ ಅವರು, ಕೆಲವು ಡೆವಲಪರ್ಗಳು ದಾಖಲೆಗಳ ವಿಚಾರದಲ್ಲಿ ಸಮಸ್ಯೆ ಸೃಷ್ಟಿಸುತ್ತಿರುವುದರಿಂದ ಅವರೊಂದಿಗೆ ಪ್ರತ್ಯೇಕವಾಗಿ ಸಭೆ ನಡೆಸುವುದಾಗಿ ಹೇಳಿದರು.
ಬೆಂಗಳೂರು ನಗರದಲ್ಲಿ ಹೈರೈಸ್ ಕಟ್ಟಡಗಳಿಗೆ ಉತ್ತೇಜನ, ರಸ್ತೆ ವಿಸ್ತರಣೆ, 132 ಕಿ.ಮೀ. ಬೆಂಗಳೂರು ಬಿಸಿನೆಸ್ ಕಾರಿಡಾರ್ ಹಾಗೂ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ಯೋಜನೆಗಳ ಬಗ್ಗೆ ಪ್ರಸ್ತಾಪಿಸಿದ ಸಿಎಂ, “ಬೆಂಗಳೂರು ಭಾರತದ ಹೃದಯವಾಗಿ ಬೆಳೆಯುತ್ತಿದೆ” ಎಂದು ಹೇಳಿದರು.


