ಬೆಂಗಳೂರು : ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಗೃಹಿಣಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ಬೆಟ್ಟದಾಸನಪುರ ಮೂಲದ ವಂದನಾ (23) ಎಂದು ಗುರುತಿಸಲಾಗಿದೆ. ಮೂರು ವರ್ಷಗಳ ಹಿಂದೆ ವಂದನಾ ಅವರು ವಿಕ್ರಂ ಶೇಷ್ ಎಂಬಾತನೊಂದಿಗೆ ವಿವಾಹವಾಗಿದ್ದು, ಮದುವೆಯಾದ ಆರಂಭದಿಂದಲೇ ಹಣಕ್ಕಾಗಿ ಪೀಡನೆ ನಡೆಯುತ್ತಿತ್ತು ಎನ್ನಲಾಗಿದೆ.
ಗುರುವಾರ ಸಂಜೆ ಹುಳಿಮಾವಿನ ಹಳೆ ಪೋಸ್ಟ್ ಆಫೀಸ್ ಸಮೀಪದ ಮನೆಯಲ್ಲಿ ಅನುಮಾನಾಸ್ಪದವಾಗಿ ವಂದನಾ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ ದಂಪತಿಗೆ ಮೂರು ತಿಂಗಳ ಮಗು ಕೂಡ ಇದೆ.
ಮೃತರ ಕುಟುಂಬಸ್ಥರು, ಈ ಸಾವಿನ ಹಿಂದೆ ಪತಿ ಹಾಗೂ ಆತನ ಕುಟುಂಬದವರ ಕೈವಾಡವಿದೆ ಎಂದು ಆರೋಪಿಸಿದ್ದಾರೆ. ಘಟನಾ ಸ್ಥಳದಲ್ಲಿ ಫ್ಯಾನ್ಗೆ ಸೀರೆ ಸಿಲುಕಿಕೊಂಡಿದ್ದ ಸ್ಥಿತಿಯನ್ನು ಉಲ್ಲೇಖಿಸಿ, ಇಂತಹ ಪರಿಸ್ಥಿತಿಯಲ್ಲಿ ನೇಣು ಬಿಗಿದುಕೊಳ್ಳುವುದು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದಕ್ಕೂ ಮೊದಲು ಕಿರುಕುಳದ ಕುರಿತು ದೂರು ನೀಡಲಾಗಿದ್ದರೂ, ಪೊಲೀಸರು ಕೇವಲ ರಾಜಿ ಸಂಧಾನಕ್ಕೆ ಪ್ರಯತ್ನಿಸಿದ್ದು, ಕಠಿಣ ಕ್ರಮ ಕೈಗೊಂಡಿಲ್ಲ ಎಂಬ ಆರೋಪವೂ ಕೇಳಿಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.


