ಬೆಳಗಾವಿ : ಸುವರ್ಣ ಸೌಧದಲ್ಲಿ ವಿಭಾಗ ಮಟ್ಟದ ಶಾಸಕರು ಹಾಗೂ ಅಧಿಕಾರಿಗಳ ಸಭೆಯ ಬಳಿಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನಡೆಸಿ ರಾಜ್ಯದ ನೀರಿನ ಸಮಸ್ಯೆ, ರೈತರ ಹಿತ, ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ, ಮಹದಾಯಿ ಯೋಜನೆ ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದರು.
ರಾಜ್ಯದಲ್ಲಿ ಬರದ ಪರಿಸ್ಥಿತಿ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ಆದ್ಯತೆ ನೀಡಲಾಗಿದ್ದು, ಗ್ರಾಮೀಣ ವಿಧಾನಸಭಾ ಕ್ಷೇತ್ರದ ಪ್ರತಿಯೊಬ್ಬ ಶಾಸಕರಿಗೆ ₹1 ಕೋಟಿ ವಿಶೇಷ ಅನುದಾನ ಘೋಷಿಸಲಾಗಿದೆ. ಡ್ಯಾಂ ಹಾಗೂ ಕೆರೆಗಳಲ್ಲಿ ನೀರು ಸಂಗ್ರಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. 50 ವರ್ಷಕ್ಕಿಂತ ಹಳೆಯ ಅಣೆಕಟ್ಟುಗಳ ಗೇಟ್ಗಳನ್ನು ಬದಲಾಯಿಸುವ ಜೊತೆಗೆ ತುಂಗಭದ್ರಾ ಜಲಾಶಯದಲ್ಲಿ ಹೂಳು ತೆರವು ಕಾರ್ಯ ಕೈಗೊಳ್ಳುವುದಾಗಿ ತಿಳಿಸಿದರು.
ಕೃಷ್ಣಾ–ಕಾವೇರಿ–ಗೋದಾವರಿ ನದಿ ಜೋಡಣೆ ಯೋಜನೆಗೆ ತಾಂತ್ರಿಕ ಸಮಿತಿ ರಚಿಸಿ ಸುಮಾರು ₹1 ಲಕ್ಷ ಕೋಟಿ ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರದ ನೆರವು ಕೋರಲಾಗಿದೆ. ರೈತರಿಗೆ ಬೀಜ ಮತ್ತು ಗೊಬ್ಬರದ ಕೊರತೆ ಉಂಟಾಗದಂತೆ ಅಗತ್ಯ ಸಂಗ್ರಹಕ್ಕೂ ಸೂಚನೆ ನೀಡಲಾಗಿದೆ.
ರಾಮಮಂದಿರ ಹುಂಡಿ ದುರ್ಬಳಕೆ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಮುಜರಾಯಿ ದೇವಸ್ಥಾನಗಳ ಹುಂಡಿಗಳ ಎದುರು ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಲು ಆದೇಶಿಸಲಾಗಿದ್ದು, ಹಣ ಎಣಿಕೆ ಪ್ರಕ್ರಿಯೆಯೂ ಸಿಸಿಟಿವಿ ನಿಗಾದಲ್ಲೇ ನಡೆಯಲಿದೆ.
ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಸೇರಿದಂತೆ ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಿಸಲಾಗುವುದು.
ಮೃತಪಟ್ಟವರ ಹೆಸರಿಗೆ ಹಣ ಜಮೆಯಾಗಿರುವ ಮಾಹಿತಿ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಯುತ್ತಿದ್ದು, ಯಾವುದೇ ಗ್ಯಾರಂಟಿ ಯೋಜನೆಯನ್ನು ಸ್ಥಗಿತಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.
ಮಹದಾಯಿ ಯೋಜನೆ ಕುರಿತು ಕೇಂದ್ರ ಸರ್ಕಾರದೊಂದಿಗೆ ನಿರಂತರ ಚರ್ಚೆ ನಡೆಸುತ್ತಿರುವುದಾಗಿ ತಿಳಿಸಿದ ಅವರು, ಮಹಾರಾಷ್ಟ್ರ ಹಾಗೂ ಗೋವಾ ಮುಖ್ಯಮಂತ್ರಿಗಳೊಂದಿಗೂ ಮಾತುಕತೆಗೆ ಸಿದ್ಧವಿರುವುದಾಗಿ ಹೇಳಿದರು. ಸಂಪುಟ ವಿಸ್ತರಣೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಲು ಸಿಎಂ ನಿರಾಕರಿಸಿದರು.


