ಮಂಗಳೂರು : ಭಾರತ ಉಪರಾಷ್ಟ್ರಪತಿ ಸಿ. ಪಿ ರಾಧಕೃಷ್ಣನ್ ಅವರು ಭಾನುವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಸಾಂಪ್ರದಾಯಿಕ ಉಡುಪಿನಲ್ಲಿ ದೇವಾಲಯ ಪ್ರವೇಶಿಸಿದ ಉಪರಾಷ್ಟ್ರಪತಿಗಳು, ಶ್ರೀ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಈ ವೇಳೆ ಕರ್ನಾಟಕ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ರವರು ಜೊತೆಯಲ್ಲಿದ್ದರು.




ದೇವರ ದರ್ಶನದ ಬಳಿಕ ಉಪರಾಷ್ಟ್ರಪತಿಗಳು ಕ್ಷೇತ್ರದ ಪ್ರಸಿದ್ಧ ಅನ್ನಪೂರ್ಣ ಛತ್ರಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ವೀಕ್ಷಿಸಿದರು. ಜೊತೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮವಿಭೂಷಣ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಸಂಸದ ಬ್ರಿಜೇಶ್ ಚೌಟ, ಪ್ರತಾಪ್ ಸಿಂಹ ನಾಯಕ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಧರ್ಮಸ್ಥಳ ಕ್ಷೇತ್ರವು ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಆರೋಗ್ಯ ಸೇವಾ ಕ್ಷೇತ್ರಗಳಲ್ಲಿ ಸಲ್ಲಿಸುತ್ತಿರುವ ಸೇವಾ ಕಾರ್ಯಗಳನ್ನು ಉಪರಾಷ್ಟ್ರಪತಿಗಳು ಶ್ಲಾಘಿಸಿದರು. ಕ್ಷೇತ್ರದ ಅಭಿವೃದ್ಧಿ ಮತ್ತು ಸಮಾಜಮುಖಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆದರು. ನಂತರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ ಆಯೋಜಿಸಲಾಗಿರುವ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ನ ಉದ್ಘಾಟನಾ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಸಿ. ಪಿ ರಾಧಾಕೃಷ್ಣನ್ ರವರು ಭಾಗವಹಿಸಿದ್ದಾರೆ.


