ಬೆಳ್ತಂಗಡಿ : ಸೌಜನ್ಯ ಪ್ರಕರಣ ಮತ್ತೆ ಸುದ್ದಿಯ ಮುನ್ನೆಲೆಗೆ ಬಂದಿದೆ. 13 ವರ್ಷಗಳ ಹಿಂದೆ ಅತ್ಯಾಚಾರ ಮತ್ತು ಕೊಲೆಗೀಡಾಗಿದ್ದ ಉಜಿರೆ ಎಸ್ಡಿಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅವರ ಧರ್ಮಸ್ಥಳದ ಪಾಂಗಾಳದಲ್ಲಿರುವ ಮನೆಗೆ ಆರ್ಎಸ್ಎಸ್ ಹಿರಿಯ ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ಬುಧವಾರ ದಿಢೀರ್ ಭೇಟಿ ನೀಡಿದರು.
ಸೌಜನ್ಯ ಅವರ ತಾಯಿ ಕುಸುಮಾವತಿ ಅವರನ್ನು ಭೇಟಿಯಾದ ಪ್ರಭಾಕರ ಭಟ್, ಕುಟುಂಬದೊಂದಿಗೆ ಕೆಲಕಾಲ ಮಾತುಕತೆ ನಡೆಸಿದರು. ಸೌಜನ್ಯ ಪ್ರಕರಣದಲ್ಲಿ ನ್ಯಾಯಕ್ಕಾಗಿ ಕುಟುಂಬ ನಡೆಸುತ್ತಿರುವ ಸುದೀರ್ಘ ಹೋರಾಟದ ಕುರಿತು ಮಾತುಕತೆ ನಡೆದಿರುವ ಸಾಧ್ಯತೆ ಇದೆ.
ಭೇಟಿಯ ವೇಳೆ ಉದ್ಯಮಿ ಸದಾನಂದ ನಾವರ, ಪುರಂದರ, ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರ ಸಹೋದರ ಮೋಹನ್ ಶೆಟ್ಟಿ ಉಜಿರೆ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.
ಆದರೆ, ಭೇಟಿಯ ವೇಳೆ ನಡೆದ ಮಾತುಕತೆಯ ನಿಖರ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ. 13 ವರ್ಷಗಳಿಂದ ನ್ಯಾಯಕ್ಕಾಗಿ ನಡೆಯುತ್ತಿರುವ ಸೌಜನ್ಯ ಕುಟುಂಬದ ಹೋರಾಟದ ನಡುವೆ ಪ್ರಭಾಕರ ಭಟ್ ಅವರ ಈ ಭೇಟಿ ಇದೀಗ ಹೊಸ ಕುತೂಹಲಕ್ಕೆ ಕಾರಣವಾಗಿದೆ.

