ಮಂಗಳೂರು : ಕೊಂಡಾಣ ದೈವಸ್ಥಾನದ ಆಡಳಿತ ಮಂಡಳಿ ವಿಚಾರವಾಗಿ ಎರಡು ಬಣಗಳ ಮಧ್ಯೆ ವಿವಾದ ಉಂಟಾಗಿ ಭಂಡಾರದ ಮನೆ ಧ್ವಂಸ ಮಾಡಿದ ಘಟನೆ ವರದಿಯಾಗಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರ ನಡುವಿನ ಬಣ ರಾಜಕೀಯ ನಿರ್ಮಾಣ ಹಂತದಲ್ಲಿರುವ ಪಿಲಿಚಾಮುಂಡಿ ದೈವಸ್ಥಾನಕ್ಕೆ ಸೇರಿದ ಭಂಡಾರ ಮನೆಯನ್ನು ಕಿಡಿಗೇಡಿಗಳು ರಾತ್ರೋರಾತ್ರಿ ಜೆಸಿಬಿ ಮೂಲಕ ಧ್ವಂಸಗೊಳಿಸಿದ್ದಾರೆ.
ಇತಿಹಾಸ ಪ್ರಸಿದ್ಧ ಕೊಂಡಾಣ ಜಾತ್ರೆ ಅಂದರೆ ಜನರಿಗೆ ಅಪಾರ ನಂಬಿಕೆ,ಇನ್ನೇನು ಮೇ ತಿಂಗಳಲ್ಲಿ ಜಾತ್ರೆ ಉತ್ಸವ ನಡೆಯಲಿದ್ದು ಇದರ ಪ್ರಯುಕ್ತ ನೂತನವಾಗಿ ಭಂಡಾರ ಮನೆಯನ್ನು ಕಾರ್ಣಿಕ ದೈವಗಳಾದ ಪಿಲಿಚಾಮುಂಡಿ ಬಂಟ, ವೈದ್ಯನಾಥ ಸೇರಿ ದೈವಗಳಿಗೆ ನೂತನವಾಗಿ ಭಂಡಾರ ಮನೆ ನಿರ್ಮಾಣ ಮಾಡಲಾಗುತಿತ್ತು ಇದೀಗ ಕಿಡಿಗೇಡಿಗಳು ಕೊಂಡಾಣ ಕ್ಷೇತ್ರದ ಭಂಡಾರ ಮನೆಯನ್ನು ಧ್ವಂಸಗೊಳಿಸಿದ್ದಾರೆ.
ಜನವರಿ 8 ರಂದು ಕೃಷ್ಣ ಶೆಟ್ಟಿ ನೇತ್ವತ್ವದಲ್ಲಿ ಭಂಡಾರ ಮನೆಯ ಶಿಲಾನ್ಯಾಸ ಮಾಡಲಾಗಿತ್ತು. ಕೊಂಡಾಣ ದೈವಸ್ಥಾನವನ್ನು ಮುಜರಾಯಿ ಇಲಾಖೆಗೆ ಸೇರಿಸಲು ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಕೃಷ್ಣ ಶೆಟ್ಟಿ ತಾಮಾರ್ ಸೇರಿದಂತೆ ಹಲವರು ಯತ್ನಿಸಿದ್ದರು.ಇದು ಕುಟುಂಬಕ್ಕೆ ಸಂಬಂಧಪಟ್ಟ ದೈವ ವಾಗಿರುವುದರಿಂದ ಖಾಸಗಿ ಭಂಡಾರ ಮನೆಯವರು ಸಮ್ಮತಿ ನೀಡಿರಲಿಲ್ಲ. ಅಲ್ಲದೆ, ಸಮಿತಿಯು ದೈವಗಳಿಗೆ ಬೇರೆ ಭಂಡಾರ ಮನೆ ನಿರ್ಮಾಣಕ್ಕೆ ಮುಂದಾಗಿತ್ತು.ಸಮೀತಿಯ ಅಧ್ಯಕ್ಷ ಸ್ಥಾನದಿಂದ ಅವಧಿ ಮುಗಿದ ಹಿನ್ನೆಲೆಯಲ್ಲಿ ಎರಡು ದಿನದ ಹಿಂದಷ್ಟೇ ಅಧಿಕಾರ ಹಸ್ತಾಂತರಿಸಿದ್ದರು. ಕೃಷ್ಣ ಶೆಟ್ಟಿ ಅಧ್ಯಕ್ಷ ಸ್ಥಾನದಿಂದ ಇಳಿಯುತ್ತಿದ್ದಂತೆ ಭಂಡಾರ ಮನೆ ಧ್ವಂಸಗೊಂಡಿದೆ.
ಭಾರೀ ಸಂಖ್ಯೆಯಲ್ಲಿ ಭಕ್ತರ ಜಮಾವಣೆ ಹಿನ್ನೆಲೆಯಲ್ಲಿ ಉಳ್ಳಾಲ ಪೊಲೀಸರ ಜೊತೆಗೆ ಎರಡು ಪೊಲೀಸ್ ತುಕಡಿಗಳನ್ನು ನಿಯೋಜಿಸಲಾಗಿದ್ದು. ಸ್ಥಳಕ್ಕೆ ಎಸಿಪಿ ಧನ್ಯಾ ನಾಯಕ್, ತಹಶೀಲ್ದಾರ್ ಪುಟ್ಟರಾಜು,ಕೋಟೆಕಾರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಆನಂದ್, ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಆನಂದ್ ಅವರು ಠಾಣೆಗೆ ದೂರು ನೀಡಿದ್ದಾರೆ. ನಿರ್ಮಾಣ ಹಂತದ ಭಂಡಾರ ಮನೆ ನೆಲಸಮಗೊಳಿಸಲಾಗಿದ್ದು, ಕಾರ್ಣಿಕ ದೈವದ ಕೋಟ್ಯಂತರ ರೂ.ಪಾಯಿ ಒಡವೆಗಳ ಅಧಿಪತ್ಯಕ್ಕಾಗಿ ಸಂಘರ್ಷ ಇದಾಗಿದೆ ಎಂದು ಆರೋಪಿಸಲಾಗಿದೆ. ಸದ್ಯ ಮುತ್ತಣ್ಣ ಶೆಟ್ಟಿ ಕುಟುಂಬಸ್ಥರ ಸುಪರ್ದಿಯಲ್ಲೇ ಒಡವೆಗಳಿದ್ದು, ಘಟನೆ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


