ಮಂಗಳೂರು : ಕುಡುಪು ಭಟ ಕಲ್ಲುರ್ಟಿ ದೈವಸ್ಥಾನದ ಸಮೀಪದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಪೊಲೀಸರು 25 ಜನರನ್ನು ತನಿಖೆಗೆ ಒಳಪಡಿಸಿ ಖಚಿತ ಮಾಹಿತಿಯ ಮೇರೆಗೆ 15 ಜನರನ್ನು ಬಂಧಿಸಿದ್ದಾರೆ.
ಅಪರಾಧ ಸ್ಥಳಕ್ಕೆ ಪರಿಶೀಲನಾ ತಜ್ಞರು ಹಾಗೂ ಮೊಬೈಲ್ ಪೊರೆನ್ಸಿಕ್ ತಂಡಗಳನ್ನು ಕರೆಯಲಾಗಿದ್ದು ಸ್ಥಳ ಪರಿಶೀಲನೆ ವೇಳೆ ಮೃತದೇಹದ ಮೈಮೇಲೆ ಸ್ಪಷ್ಟವಾದ ಹಾಗೂ ಗಂಭೀರ ಗಾಯಗಳು ಕಂಡುಬಾರದ ಕಾರಣ, ಅಪರಾಧ ಸ್ಥಳ ಪರಿಶೀಲನಾ ತಜ್ಞರು ಮತ್ತು ಪೊರೆನ್ಸಿಕ್ ತಂಡಗಳು ಶವ ಪರೀಕ್ಷೆನಡೆಸುವಂತೆ ಶಿಫಾರಸು ಮಾಡಿದ್ದರು. ಪ್ರಾಥಮಿಕವಾಗಿ, ಅಪರಿಚಿತ ಮೃತದೇಹ ಕಂಡುಬಂದ ಬಗ್ಗೆ ಸ್ವೀಕೃತ ದೂರಿನಂತೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದೆ ಅಸ್ವಾಭಾವಿಕ ಸಾವು ಪ್ರಕರಣವನ್ನುದಾಖಲಿಸಲಾಗಿತ್ತು. ಹಾಗೂ ಮೃತದೇಹವನ್ನು ಮರಣೋತ್ತರ ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವ ಸಮುವಾಗಿ ಮಂಗಳೂರು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿತ್ತು. ಈ ಬಗ್ಗೆ ಸ್ಥಳೀಯ ಪೊಲೀಸರು ಮತ್ತು ಹಿರಿಯ ಅಧಿಕಾರಿಗಳು ಸ್ಥಳಕ್ಕೆ, ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳು ಹಾಗೂ ಮೊಬೈಲ್/ಟವರ್ ಡಂಪ್ ಡೇಟಾ ಸಂಗ್ರಹಿಸಿ ಆರೋಪಿಗಳನ್ನು ಬಂಧಿಸಿದ್ದಾರೆ. ವೈದ್ಯಕೀಯ ಪರೀಕ್ಷೆ ನಡೆಸಿದ ವೈದ್ಯರು ನೀಡಿದ ಪ್ರಾಥಮಿಕ ವರದಿ ಪ್ರಕಾರ, ಮೃತನ ಬೆನ್ನು ಭಾಗದಲ್ಲಿ ಬಹಳಷ್ಟು ಬಲವಾದ ಹೊಡೆತದ ಗಾಯಗಳ ಕಾರಣದಿಂದ ಉಂಟಾದ ರಕ್ತಸ್ರಾವ, ಶಾಕ್ ಮತ್ತು ಸೂಕ್ತ ಸಮಯದಲ್ಲಿ ಸರಿಯಾದ ಚಿಕಿತ್ಸೆ ಸಿಗದಿರುವುದರಿಂದ ಮರಣ ಸಂಭವಿಸಿರುವುದು ಕಂಡುಬಂದಿದೆ.
ದಿನಾಂಕ 27-04-2025 ರಂದು ಮಧ್ಯಾಹ್ನ ಸುಮಾರು 3:00 ಗಂಟೆಗೆ ಭಟ್ರ ಕಲ್ಲುರ್ಟಿ ದೈವಸ್ಥಾನದ ಬಳಿ ಮೈದಾನದಲ್ಲಿ ನಡೆಯುತ್ತಿದ್ದ ಕ್ರಿಕೆಟ್ ಪಂದ್ಯಾವಳಿಯ ಸಮಯದಲ್ಲಿ ವ್ಯಕ್ತಿ ಒಬ್ಬ ಗೋಣಿ ಚೀಲದೊಂದಿಗೆ ಮೈದಾನದ ಮಧ್ಯಭಾಗದಲ್ಲಿ ನಡೆದುಕೊಂಡು ಹೋಗುತ್ತಿರುವ ಸಂದರ್ಭದಲ್ಲಿ ಕೆಲವರು ಗುಂಪು ಸೇರಿ ಕೈಯಿಂದ ಮತ್ತು ಕಟ್ಟಿಗೆಯಿಂದ ಹೊಡೆದು, ಕಾಲಿನಿಂದ ಯದ್ವಾತದ ತುಳಿದು ಹಲ್ಲೆ ನಡೆಸಿದ್ದು, ಈ ಸಮಯ ಕೆಲವರು ತಡೆಯಲು ಯತ್ನಿಸಿದರೂ, ಆತನ ಮೇಲೆ ನಿರಂತರ ಹಲ್ಲೆ ನಡೆಸಿದ ಕಾರಣ ಅಪರಿಚಿತ ವ್ಯಕ್ತಿಯು ಮೃತಪಟ್ಟಿರುವುದು ಕಂಡುಬಂದಿದೆ.
ಈ ಪ್ರಕರಣಕ್ಕೆ ಸಂಬಂಧಿದಂತೆ ದೀಪಕ” ಕುಮಾರ್ ರವರು ನೀಡಿದ ದೂರಿನ ಹಿನ್ನೆಲೆ ಮಂಗಳೂರು ಗ್ರಾಮಾಂತರ ಪೊಲೀಸರು 37/2025, 00: 103(2), 115(2), 189(2), 190, 191(1), 191(3), 240 ಭಾರತೀಯ ನ್ಯಾಯ ಸಂಹಿತೆ, 2023 (BNS, 2023) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮೂಲಗಳ ಪ್ರಕಾರ ಮೃತಪಟ್ಟ ವ್ಯಕ್ತಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದು ಆ ಸಮಯದಲ್ಲಿ ಮೈದಾನದಲ್ಲಿದ್ದ ಜನರು ಕೆರಳಿ ಹಿಗ್ಗಾ ಮುಗ್ಗ ಥಳಿಸಿದ್ದಾರೆಂದು ತಿಳಿದಿದೆ. ಈ ಪ್ರಕರಣದಲ್ಲಿ ಸಚಿನ್ ಟಿ ,ದೇವದಾಸ್ , ಮಂಜುನಾಥ್, ಸಾಯಿದೀಪ್ ,ನಿತೇಶ್ ಕುಮಾರ್,ದೀಕ್ಷಿತ್ ಕುಮಾರ್,ಸಂದೀಪ್ ,ವಿವಿಯನ್ ಆಳ್ವಾರೀಸ್,ಶ್ರೀದತ್ತ ರಾಹುಲ್, ಪ್ರದೀಪ್ ಕುಮಾರ್,ಮನೀಷ್ ಶೆಟ್ಟಿ,ಧನುಷ್,ದೀಕ್ಷಿತ್,ಕಿಶೋರ್ ಕುಮಾರ್ ಎಂಬುವವರನ್ನು ಬಂದಿಸಿದ್ದಾನೆ. ಮೃತ ವ್ಯಕ್ತಿಯ ವಿಳಾಸ ಇನ್ನೂ ಪತ್ತೆಯಾಗದ ಕಾರಣ ಮೃತದೇಹವನ್ನು ಜಿಲ್ಲಾಸ್ಪತ್ರೆಯಲ್ಲಿ ಇರಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.


