ಮಂಗಳೂರು : ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ವಂದೇ ಮಾತರಂ ಗೀತೆಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ವಿರುದ್ಧ ಮಂಗಳೂರಿನ ಉರ್ವಾ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲಾಗಿದೆ.

ಬಿಜೆಪಿ ಮುಖಂಡ ವಿಕಾಸ್ ಪುತ್ತೂರು ಅವರು ದೂರು ನೀಡಿದ್ದು, ಸೋನಿಯಾ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ರಾಷ್ಟ್ರೀಯ ಗೌರವಕ್ಕೆ ಅಪಮಾನ ಹಾಗೂ ಉದ್ದೇಶಪೂರ್ವಕವಾಗಿ ಶಾಂತಿಭಂಗಕ್ಕೆ ಕಾರಣವಾಗುವ ರೀತಿಯಲ್ಲಿ ನಡೆದುಕೊಂಡಿರುವ ಆರೋಪವನ್ನು ದೂರಿನಲ್ಲಿ ಮಾಡಲಾಗಿದೆ. ರಾಷ್ಟ್ರೀಯ ಗೌರವಕ್ಕೆ ಅಪಮಾನ ತಡೆಗಟ್ಟುವ ಕಾಯ್ದೆಯ ಸೆಕ್ಷನ್ 3ರಡಿ ಪ್ರಕರಣ ದಾಖಲಿಸುವಂತೆ ಮನವಿ ಮಾಡಲಾಗಿದೆ.
ಇದರ ಜೊತೆಗೆ ಬಿಎನ್ಎಸ್ ಸೆಕ್ಷನ್ 195 ಮತ್ತು 352ರ ಅಡಿಯಲ್ಲಿ ಎಫ್ಐಆರ್ ದಾಖಲಿಸುವಂತೆ ವಿಕಾಸ್ ಪುತ್ತೂರು ಆಗ್ರಹಿಸಿದ್ದಾರೆ. ದೂರು ಸ್ವೀಕರಿಸಿರುವ ಉರ್ವಾ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ತಜ್ಞರ ಅಭಿಪ್ರಾಯ ಪಡೆದು ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಎಫ್ಐಆರ್ ದಾಖಲಿಸದಿದ್ದಲ್ಲಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸುವುದಾಗಿ ವಿಕಾಸ್ ಪುತ್ತೂರು ತಿಳಿಸಿದ್ದಾರೆ.
ಮುಂದಿನ ಕ್ರಮದ ಬಗ್ಗೆ ಪೊಲೀಸರ ಕಾನೂನು ಅಭಿಪ್ರಾಯದ ಬಳಿಕ ಸ್ಪಷ್ಟತೆ ದೊರೆಯುವ ನಿರೀಕ್ಷೆಯಿದೆ.

