ಮಂಗಳೂರು ; ಈದ್ ಮಿಲಾದ್ ಮೆರವಣಿಗೆಗೆ ಸಂಬಂಧಿಸಿದಂತೆ ಪ್ರಚೋದನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಯ ಮುಖಂಡರಾದ ಶರಣ್ ಪಂಪ್ವೆಲ್ ಮತ್ತು ಪುನೀತ್ ಅತ್ತಾವರ್ ವಿರುದ್ಧ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ಪ್ರಚೋದನಕಾರಿ ಹೇಳಿಕೆ ನೀಡಿ ಸಾಮಾಜಿಕ ಜಾಲತಾಣದಲ್ಲಿ ಆಡಿಯೋ ಹರಿಬಿಟ್ಟಿದ್ದ ಮುಸ್ಲಿಂ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸರು ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇರಿಸಿದ್ದಾರೆ.
ಬೆಳ್ಳಂ ಬೆಳಗ್ಗೆ ಹಿಂದು ಸಂಘಟನೆ ಕಾರ್ಯಕರ್ತರು ಬಿಸಿ ರೋಡ್ನ ರಕ್ತೇಶ್ವರಿ ದೇವಸ್ಥಾನದ ಬಳಿ ಜಮಾವಣೆಯಾದರು. ಕೆಲ ಹೊತ್ತಿನ ಬಳಿಕ ಶರಣ್ ಪಂಪವೆಲ್, ಪುನೀತ್ ಅತ್ತಾವರ ಕೂಡ ಆಗಮಿಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶರಣ್ ಪಂಪ್ವೆಲ್, ಕೇವಲ ಶರಣ್ ಪಂಪ್ವೆಲ್ಗೆ ಸವಾಲು ಹಾಕಿದ್ದಲ್ಲ. ಇಡೀ ಹಿಂದೂ ಸಮಾಜಕ್ಕೆ ಸವಾಲು ಹಾಕಿದ್ದರು. ಹೀಗಾಗಿ ಬಿ.ಸಿ.ರೋಡ್ಗೆ ನಾವು ಬಂದಿದ್ದೇವೆ. ನಮ್ಮ ಱಲಿಯನ್ನು ಪೊಲೀಸರು ತಡೆದಿದ್ದನ್ನು ಖಂಡಿಸ್ತೇನೆ. ನಾನು ಯಾವುದೇ ಪ್ರಚೋದನಕಾರಿ ಹೇಳಿಕೆ ನೀಡಿಲ್ಲ. ನಾಗಮಂಗಲದಲ್ಲಿ ಹಿಂದೂ ಅಂಗಡಿಗಳಿಗೆ ಬೆಂಕಿ ಹಾಕಿದ್ದಾರೆ. ಸವಾಲು ಹಾಕಿದವನಿಗೆ ತಾಕತ್ ಇದ್ದರೆ ಇಲ್ಲಿಗೆ ಬರಬೇಕಿತ್ತು ಎಂದು ಹೇಳಿದ್ದಾರೆ.
ಪ್ರಚೋದನಕಾರಿ ಹೇಳಿಕೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತರು ತಿಳಿಸಿದ್ದಾರೆ.ಪೊಲೀಸರು ಪುನೀತ್ ಅತ್ತಾವರನನ್ನು ಮಂಡ್ಯದಲ್ಲಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.


