ಮಂಗಳೂರು : ನೂತನವಾಗಿ ಅಧಿಕಾರ ವಹಿಸಿಕೊಂಡ ಬಳಿಕ ಪ್ರಥಮ ಬಾರಿಗೆ ಮಂಗಳೂರಿಗೆ ಆಗಮಿಸಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಬರ ನಿರ್ವಹಣೆಯಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.

ನವೆಂಬರ್ 22, ಬುಧವಾರ ಮಂಗಳೂರಿನ ಪಕ್ಷದ ಕಚೇರಿಯಲ್ಲಿ ಬಿಜೆಪಿ ರಾಜ್ಯ ನೂತನ ಅಧ್ಯಕ್ಷರು ಸುದ್ದಿಗಾರರೊಂದಿಗೆ ಮಾತನಾಡಿದರು.ಬರ ನಿರ್ವಹಣೆ ಕುರಿತು ಚರ್ಚೆ ನಡೆಸಬೇಕಾದ ರಾಜ್ಯ ಸರಕಾರ ಹಾಗೂ ಸಚಿವರು ಬದಲಾಗಿ ಮುಂದಿನ ಲೋಕಸಭೆ ಚುನಾವಣೆ ಹಾಗೂ ಮಂಡಳಿ, ನಿಗಮಗಳ ನೇಮಕಾತಿ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ ಎಂದರು. ಸರ್ಕಾರ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡುತ್ತಿಲ್ಲ, ಮುಂದಿನ ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಈ ವಿಷಯಗಳ ಬಗ್ಗೆ ಪ್ರಸ್ತಾಪಿಸಲಿದೆ ಎಂದರು.
ಯಾರೂ ಬಿಜೆಪಿ ತೊರೆಯುವುದಿಲ್ಲ ಎಂದು ಪುನರುಚ್ಚರಿಸಿದ ಅವರು, ಪಕ್ಷ ತೊರೆದವರನ್ನು ಮರಳಿ ಕರೆತರಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.ಬಿಜೆಪಿ ಜಾತಿ ಗಣತಿ ವಿರೋಧಿಯಲ್ಲ, ಅದನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವುದನ್ನು ವಿರೋಧಿಸುತ್ತದೆ ಎಂದು ವಿಜಯೇಂದ್ರ ಹೇಳಿದರು.
ಸ್ಪೀಕರ್ ಹುದ್ದೆಗೆ ಧಕ್ಕೆ ತಂದಿರುವ ಸಚಿವ ಜಮೀರ್ ಅಹಮದ್ ಖಾನ್ ಅವರ ರಾಜೀನಾಮೆಯನ್ನು ಸಿಎಂ ಕೇಳಬೇಕು ಎಂದು ಅವರು ಹೇಳಿದರು.ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 28 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಬಿಜೆಪಿ ಹೊಂದಿದೆ ಎಂದರು.
ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ್ ಕಾಮತ್, ಉಮಾನಾಥ ಕೋಟ್ಯಾನ್, ಭರತ್ ಶೆಟ್ಟಿ, ಹರೀಶ್ ಪೂಂಜಾ, ಭಾಗೀರಥಿ ಮುರುಳ್ಯ, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ದ.ಕ. ಬಿಜೆಪಿ ಮುಖಂಡ ಸುದರ್ಶನ್ ಮೂಡುಬಿದಿರೆ ಮೊದಲಾದವರು ಉಪಸ್ಥಿತರಿದ್ದರು.


