ಮಂಗಳೂರು : ಮಂಗಳೂರಿನಲ್ಲಿ ಸೆ.18ರಂದು ಐತಿಹಾಸಿಕ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು.


ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಹಾಗೂ ಅಪರ ಜಿಲ್ಲಾಧಿಕಾರಿ ರಾಜು ಕೆ. ಅವರು ಸಚಿವರಿಗೆ ಸಭೆಯ ಸಿದ್ಧತೆಗಳ ಕುರಿತು ಮಾಹಿತಿ ನೀಡಿದರು. ಸಭೆ ನಡೆಯುವ ಸ್ಥಳದಲ್ಲಿ ಆಸನ ವ್ಯವಸ್ಥೆ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವರಿಗೆ ಪ್ರತ್ಯೇಕ ಕೊಠಡಿಗಳು, ಮೈಕ್ ಮತ್ತು ಧ್ವನಿ ವ್ಯವಸ್ಥೆ, ಅಧಿಕಾರಿಗಳ ಲಾಂಜ್ ಸೇರಿದಂತೆ ವಿವಿಧ ವ್ಯವಸ್ಥೆಗಳನ್ನು ಖಾದರ್ ಪರಿಶೀಲಿಸಿದರು.
ಸಿದ್ಧತೆಗಳ ವೇಳೆ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದ ಅವರು, ಸಚಿವ ಸಂಪುಟ ಸಭೆಯ ಆತಿಥ್ಯ ಹಾಗೂ ವ್ಯವಸ್ಥೆಗಳಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಿದರು. ಸ್ಥಳ ಪರಿಶೀಲನೆಯ ಬಳಿಕ ಮಾತನಾಡಿದ ಯು.ಟಿ. ಖಾದರ್, ನೂತನ ಸರ್ಕಾರ ರಚನೆಯಾದ ಬಳಿಕ ಬೆಂಗಳೂರಿನ ಹೊರಗೆ ನಡೆಯುತ್ತಿರುವ ಮೊದಲ ರಾಜ್ಯ ಸಚಿವ ಸಂಪುಟ ಸಭೆ ಇದಾಗಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಈ ಹಿಂದೆ ನೀಡಿದ್ದ ಭರವಸೆಯಂತೆ ಮಂಗಳೂರಿನಲ್ಲಿ ಸಂಪುಟ ಸಭೆ ಆಯೋಜಿಸಲಾಗಿದೆ. ಮಂಗಳೂರನ್ನು ಆಯ್ಕೆ ಮಾಡಿದ್ದಕ್ಕಾಗಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವ ಸಂಪುಟಕ್ಕೆ ಧನ್ಯವಾದ ಸಲ್ಲಿಸಿದ ಅವರು, ಸಂಪುಟ ಸಭೆಯು ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ನೀತಿ-ನಿಯಮಗಳ ನಿರ್ಣಯಕ್ಕೆ ಸಂಬಂಧಿಸಿದ್ದಾದರೂ, ಮಂಗಳೂರಿನಲ್ಲಿ ನಡೆಯುತ್ತಿರುವುದರಿಂದ ಕರಾವಳಿ ಭಾಗದ ಅಭಿವೃದ್ಧಿ ಹಾಗೂ ಪ್ರಮುಖ ಯೋಜನೆಗಳಿಗೆ ವಿಶೇಷ ಆದ್ಯತೆ ಸಿಗುವ ನಿರೀಕ್ಷೆಯಿದೆ ಎಂದರು.
ಸಭೆಯ ಸಿದ್ಧತೆಗಳ ಕುರಿತು ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಚರ್ಚಿಸಿ, ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.

