ಬೆಂಗಳೂರು : ವೈದ್ಯಕೀಯ ನಿರ್ಲಕ್ಷ್ಯದ ಗಂಭೀರ ಆರೋಪದ ನಡುವೆಯೇ ರೋಗಿಯೊಬ್ಬರು ಅಮಾನವೀಯ ಪರಿಸ್ಥಿತಿಯಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆದಿದೆ. 45 ವರ್ಷದ ಡೆಲಿವರಿ ಬಾಯ್ ಶಾ ನವಾಜ್ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ಪ್ರಕರಣದ ವಿವರ:
ಮರ್ಮಾಂಗದಲ್ಲಿ ಗಡ್ಡೆ ಕಾಣಿಸಿಕೊಂಡ ಹಿನ್ನೆಲೆ ಶಾ ನವಾಜ್ ಸುಮಾರು ಒಂದೂವರೆ ತಿಂಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದರು. ಸೋಂಕಿನ ಕಾರಣ ನೀಡಿ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದರು. ಬಳಿಕ ಮುಂದಿನ ಚಿಕಿತ್ಸೆಗೆ ಪ್ಲಾಸ್ಟಿಕ್ ಸರ್ಜರಿ ವಿಭಾಗಕ್ಕೆ ತೆರಳುವಂತೆ ಸೂಚಿಸಲಾಗಿತ್ತು. ಆದರೆ ಶಸ್ತ್ರಚಿಕಿತ್ಸೆ ವಿಭಾಗ ಮತ್ತು ಪ್ಲಾಸ್ಟಿಕ್ ಸರ್ಜರಿ ವಿಭಾಗಗಳ ನಡುವೆ ಸಮನ್ವಯತೆಯ ಕೊರತೆಯಿಂದಾಗಿ, ಗಾಯ ಸಂಪೂರ್ಣ ಗುಣವಾಗುವ ಮುನ್ನವೇ ರೋಗಿಯನ್ನು ಡಿಸ್ಚಾರ್ಜ್ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಶಸ್ತ್ರಚಿಕಿತ್ಸೆ ಮಾಡಿದ ಸ್ಥಳಕ್ಕೆ ಸೂಕ್ತ ಚಿಕಿತ್ಸೆ ಅಥವಾ ಹೊಲಿಗೆ ನೀಡದೆ ಆಸ್ಪತ್ರೆಯಿಂದ ಹೊರಕ್ಕೆ ಕಳುಹಿಸಲಾಗಿದೆ ಎಂದು ಕುಟುಂಬಸ್ಥರು ದೂರಿದ್ದಾರೆ.
ಫುಟ್ಪಾತ್ನಲ್ಲೇ ಅಂತಿಮ ಉಸಿರು:
ಮತ್ತೆ ಆಸ್ಪತ್ರೆಗೆ ದಾಖಲಿಸಿಕೊಳ್ಳಲು ಸಿಬ್ಬಂದಿ ನಿರಾಕರಿಸಿದ ಹಿನ್ನೆಲೆಯಲ್ಲಿ, ಶಾ ನವಾಜ್ ಅವರನ್ನು ಅವರ ಪತ್ನಿ ಮೂರು ದಿನಗಳ ಕಾಲ ಆಸ್ಪತ್ರೆ ಹೊರಗಿನ ಫುಟ್ಪಾತ್ನಲ್ಲಿ ಇರಿಸಿಕೊಂಡಿದ್ದರು. ಗಂಭೀರ ರಕ್ತಸ್ರಾವವಾಗುತ್ತಿದ್ದರೂ ಚಿಕಿತ್ಸೆ ಸಿಗದೇ ತೀವ್ರ ನೋವಿನಿಂದ ನರಳಿ ಅವರು ಮೃತಪಟ್ಟಿದ್ದಾರೆ. ಮೃತರ ಪತ್ನಿ ಹಾಗೂ ನಾಲ್ವರು ಮಕ್ಕಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.
ತನಿಖೆಗೆ ಆದೇಶ:
ಪ್ರಕರಣಕ್ಕೆ ಪ್ರತಿಕ್ರಿಯಿಸಿರುವ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ದೀಪಕ್, ಆರೋಪಗಳ ಕುರಿತು ತನಿಖೆಗೆ ತಜ್ಞರ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದ್ದಾರೆ. ಸಮಿತಿಯ ವರದಿಯ ಆಧಾರದ ಮೇಲೆ ತಪ್ಪು ದೃಢಪಟ್ಟಲ್ಲಿ ಸಂಬಂಧಿತ ವೈದ್ಯರು ಅಥವಾ ಸಿಬ್ಬಂದಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.


