ಮಂಗಳೂರು : ಇಂದು ಮುಂಜಾನೆ 8-00 ಗಂಟೆಗೆ ಶಾರದಾ ವಿದ್ಯಾನಿಕೇತನ ತಲಪಾಡಿ ಶಾಲಾ ಬಸ್ಸಿನ ಹಿಂಬದಿಗೆ ಮೀನು ಸಾಗಾಟದ ಕ್ಯಾಂಟರ್ ಢಿಕ್ಕಿ ಹೊಡೆದ ಘಟನೆ ರಾ.ಹೆ.66 ರ ಕಾಪಿಕಾಡು ಎಂಬಲ್ಲಿ ನಡೆದಿದೆ. ಅಪಘಾತದಿಂದ ಏಳು ಮಂದಿ ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದೆ ಎಂದು ಮಾಹಿತಿ ದೊರೆತಿದೆ.
ತಲಪಾಡಿಯ ಶಾರದಾ ನಿಕೇತನ ಪಬ್ಲಿಕ್ ಸ್ಕೂಲ್ & ಕಾಲೇಜಿಗೆ ಸೇರಿದ ಬಸ್ಸು ಇದಾಗಿದ್ದು ಇಂದು ಬೆಳಗ್ಗಿನ ಜಾವಾ ಕಾಪಿಕಾಡಿನ ಹೆದ್ದಾರಿ ಅಂಚಿನಲ್ಲಿ ವಿದ್ಯಾರ್ಥಿಗಳನ್ನ ಬಸ್ಸಿಗೆ ಹತ್ತಿಸಿ ತಲಪಾಡಿ ಕಡೆಗೆ ತೆರಳುತ್ತಿದ್ದಾಗ, ಹಿಂದಿನಿಂದ ಬಂದ ಮೀನಿನ ಕ್ಯಾಂಟರ್ ಬಲವಾಗಿ ಢಿಕ್ಕಿ ಹೊಡೆದಿದೆ. ಗೋವಾದಿಂದ ಕೇರಳದ ಕಡೆಗೆ ಕ್ಯಾಂಟರ್ ನಲ್ಲಿ ಮೀನು ಸಾಗಿಸುತ್ತಿದ್ದ ಕುಂದಾಪುರ ಮೂಲದ ಚಾಲಕ ಸಂಜೀವ ಎಂಬವರು ನಿದ್ರೆಯ ಮಂಪರಿನಲ್ಲಿದ್ದ ಪರಿಣಾಮ ಅಪಘಾತ ನಡೆದಿರುವುದಾಗಿ ತಿಳಿದು ಬಂದಿದೆ.
ಘಟನೆಯಿಂದ ಬಸ್ಸಿನೊಳಗಿದ್ದ ನಾಲ್ಕು ವಿದ್ಯಾರ್ಥಿಗಳು ಹಾಗೂ ಮೂರು ವಿದ್ಯಾರ್ಥಿನಿಯರು ಗಾಯಗೊಂಡಿದ್ದು . ವಿದ್ಯಾರ್ಥಿಗಳಿಗೆ ತೊಕ್ಕೊಟ್ಟಿನ ನೇತಾಜಿ ಎಲ್ಲಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿರುತ್ತದೆ. ಓರ್ವ ವಿದ್ಯಾರ್ಥಿಯ ಕಾಲಿಗೆ ಗಾಯವಾಗಿದ್ದು ಆತನನ್ನ ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಬಸ್ಸಿನಲ್ಲಿ ಒಟ್ಟು 24 ರಷ್ಟು ವಿದ್ಯಾರ್ಥಿಗಳಿದ್ದು ಅದೃಷ್ಟವಶಾತ್ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದರೆಂದು ತಿಳಿದುಬಂದಿದೆ.


