ಮೈಸೂರು : 5 ಸಾವಿರ ಕೋಟಿಗೂ ಅಧಿಕ ಮೊತ್ತದ ಭ್ರಷ್ಟಾಚಾರ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎಂದು ಬಿಜೆಪಿ ಪರಿಷತ್ ಸದಸ್ಯ ಎಂದು ಎಚ್.ವಿಶ್ವನಾಥ್ ಗಂಭೀರ ಆರೋಪ ಮಾಡಿದ್ದಾರೆ.
ಯತೀಂದ್ರ ಸಿದ್ದರಾಮಯ್ಯ ಮತ್ತು ತಂಡದ ಸಹಕಾರದಿಂದ ಮುಡಾ ಅಧಿಕಾರಿಗಳು ಸುಮಾರು 5 ಸಾವಿರ ಕೋಟಿ ರೂ. ಗಳ ಅವ್ಯವಹಾರ ನಡೆದಿದೆ ಎಂದು ಹೇಳಿದ್ದಾರೆ.2019ರಲ್ಲಿ ಮುಡಾ ಸುಪರ್ದಿನಲ್ಲಿ 9 ಸಾವಿರ ನಿವೇಶನಗಳಿದ್ದವು. ಇದರಲ್ಲಿ 5 ಸಾವಿರಕ್ಕೂ ಹೆಚ್ಚು ನಿವೇಶನಗಳನ್ನು ಮಾರಿಕೊಳ್ಳಲಾಗಿದೆ. ಹಿಂದಿನ ಬಿಜೆಪಿ ಸರಕಾರ ಹಾಗೂ ಈಗಿನ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ನಿಯಮ ಬಾಹಿರವಾಗಿ ನಿವೇಶನ ಹಂಚಿಕೆಯಾಗಿದೆ ಎಂದು ದೂರಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತನಿಂದ ಮುಡಾ ಅಧೋಗತಿಗೆ ತಲುಪಿದೆ. ಒಂದಷ್ಟು ನಾಯಕರು, ಅಧಿಕಾರಿಗಳು ಸಿಂಡಿಕೇಟ್ ರಚಿಸಿಕೊಂಡಿದ್ದು, ಈ ದಂಧೆ ನಡೆಸಲಾಗುತ್ತಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು. ಎಲ್ಲ ಆರೋಪಿಗಳನ್ನೂ ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಬಹುಕೋಟಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಮುಡಾ ಆಯುಕ್ತ ದಿನೇಶ್ ಕುಮಾರ್, ಕಾರ್ಯದರ್ಶಿ ಮತ್ತು ಎಇಇ ವರ್ಗಾವಣೆ ಮಾಡಿ ಕೂಡಲೇ ಜಾರಿಗೆ ಬರುವಂತೆ ಸೋಮವಾರ ಸಚಿವ ಭೈರತಿ ಸುರೇಶ್ ಮೌಖಿಕ ಆದೇಶ ಹೊರಡಿಸಿದ್ದಾರೆ. ಹಂಚಿಕೆ ಆಗಿರುವ ಎಲ್ಲಾ ಸೈಟ್ಗಳನ್ನು ತಡೆಹಿಡಿಯಲಾಗಿದೆ. 50:50 ಅನುಪಾತದಲ್ಲಿ ನಿವೇಶನ ಹಂಚಿಕೆ ಸಂಬಂಧ ಐಎಎಸ್ ಅಧಿಕಾರಿಗಳಾದ ವೆಂಕಟಚಲಪತಿ, ಕವಳಗಿ ನೇತೃತ್ವದಲ್ಲಿ ತನಿಖೆ ನಡೆಸಿ 4 ವಾರಗಳಲ್ಲಿ ವರದಿ ಸಲ್ಲಿಸುವಂತೆ ಆದೇಶಿಸಲಾಗಿದೆ.
ಈ ಕುರಿತಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಮುಡಾದಲ್ಲಿ ಹಗರಣ ನಡೆದಿದೆ ಅಂತಾ ಮಾಧ್ಯಮಗಳಲ್ಲಿ ಬರುತ್ತಿದೆ. ಈ ವಿಚಾರ ನಿನ್ನೆಯಷ್ಟೇ ಗಮನಕ್ಕೆ ಬಂದಿದೆ. ಹಗರಣ ಆರೋಪ ಕೇಳಿಬಂದ ಹಿನ್ನೆಲೆ ಇಂದು ಸಭೆ ನಡೆಸಿದ್ದೇನೆ. ಸಭೆಯಲ್ಲಿ ಹಲವಾರು ವಿಚಾರ ಚರ್ಚೆಯಾಗಿದೆ ಎಂದರು. ಹೆಚ್. ವಿಶ್ವನಾಥ್ ಅವರು ನಮಗಿಂತ ಹಿರಿಯರು. ಯತೀಂದ್ರ ಬಗ್ಗೆ ಹೇಳೋದಕ್ಕೆ ಏನು ಸಾಕ್ಷಿಯಿದೆ? ಅವರ ಹೇಳಿಕೆಯನ್ನ ಆ ದೇವರೇ ಮೆಚ್ಚಬೇಕು. ವಿಶ್ವನಾಥ್ ಅವರ ಬಳಿ ಸಾಕ್ಷಿ ಇದ್ದರೆ ತಂದು ಕೊಡಲಿ ಎಂದು ಸವಾಲು ಹಾಕಿದರು.


