ಮೈಸೂರು : ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಅವರ ಪರ ಪ್ರಚಾರ ಕೈಗೊಂಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರಿಗೆ ಪ್ರತಿಭಟನೆ ಬಿಸಿ ತಟ್ಟಿದೆ.
ನಂಜನಗೂಡು ತಾಲ್ಲೂಕಿನ ಮಲ್ಲುಪುರ ಗ್ರಾಮಪಂಚಾಯಿತಿಯಲ್ಲಿ ಯತೀಂದ್ರ ಅವರನ್ನು ಅಡ್ಡಗಟ್ಟಿ ಚುನಾವಣೆ ಬಹಿಷ್ಕರಿಸುವ ಬೆದರಿಕೆ ಹಾಕಿದ್ದಾರೆ. ಮಲ್ಲುಪುರದಲ್ಲಿರುವ ಬಣ್ಣಾರಿ ಅಮ್ಮನ್ ಸರ್ಕಾರಿ ಕಾರ್ಖಾನೆ ಬಳಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಚುನಾವಣಾ ಪ್ರಚಾರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಯತೀಂದ್ರ ಅವರು ಪ್ರತಿಭಟನಾ ನಿರತ ರೈತರನ್ನು ಭೇಟಿ ಮಾಡಿ ಮತಯಾಚಿಸಿದರು. ಈ ಸಂದರ್ಭದಲ್ಲಿ ಆಕ್ರೋಶಗೊಂಡು ರೈತರು ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು.
ರೈತರ ಸಿಟ್ಟಾಗುತ್ತಿದ್ದಂತೆ ಅವರ ಮನವೊಲಿಕೆಗೆ ಯತೀಂದ್ರ ಮುಂದಾದರು. ಆದರೆ ಅವರ ಕೋಪ ಇಷ್ಟಕ್ಕೆ ನಿಲ್ಲಲಿಲ್ಲ. ಚುನಾವಣಾ ಸಲುವಾಗಿ ಬಂದಿದ್ದೀರಿ. ಇಲ್ಲದಿದ್ದರೆ ಯಾವುದೇ ಕಾರಣಕ್ಕೆ ಬರುತ್ತಿರಲಿಲ್ಲ ಎಂದು
ಕಿಡಿಕಾರಿದರು.
ಕಾರ್ಖಾನೆಯವರು ನಮ್ಮ ಬೇಡಿಕೆ ಈಡೇರಿಸುತ್ತಿಲ್ಲ ಎಂದು ಹೇಳಿದಾಗ ಈ ವಿಷಯ ತಮ್ಮ ತಂದೆಯವರ ಗಮನಕ್ಕೆ ತರುತ್ತೇನೆ ಎಂದು ಭರವಸೆ ಕೊಟ್ಟಿದ್ದರು. ಇದರಿಂದ ಕುಪಿತಗೊಂಡ ಪ್ರತಿಭಟನಾಕಾರರು ಈ ವಿಚಾರವನ್ನು ಇನ್ನು ನಿಮ್ಮ ತಂದೆಯವರ ಗಮನಕ್ಕೆ ತಂದಿಲ್ಲವೇ ಎಂದು ತರಾಟೆಗೆ ತೆಗೆದುಕೊಂಡರು.
ಬೇಡಿಕೆ ಈಗಲೇ ಈಡೇರಿಸಬೇಕು. ಇಲ್ಲದಿದ್ದರೆ ಮೂರು ಗ್ರಾಮಗಳಲ್ಲಿ ಚುನಾವಣೆ ಬಹಿಷ್ಕರ ಮಾಡುವುದಾಗಿ ಎಚ್ಚರಿಕೆ ನೀಡಿದರು. ಯತೀಂದ್ರ ಅವರು ಅಲ್ಲಿಂದವಾಪಸ್ ಆದರು.


