ಮೈಸೂರು : ಜಿಲ್ಲೆಯ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ.
ಕಾಡು @ ಹರೀಶ್ (40) ಎಂಬಾತ ತನ್ನ ಹೆಂಡತಿ ಹಾಗೂ ಮಕ್ಕಳನ್ನು ಹತ್ಯೆಗೈದು ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ತಾಯಿ, ಹೆಂಡತಿ ಮತ್ತು ಮಕ್ಕಳು ಒಂದೇ ಮನೆಯಲ್ಲಿ ವಾಸವಿದ್ದು, ಘಟನೆಗೆ ಮೂರು ದಿನಗಳ ಮುನ್ನ ತಾಯಿಯನ್ನು ಅಜ್ಜಿ ಮನೆಗೆ ಕಳುಹಿಸಿದ್ದ ಎಂದು ತಿಳಿದುಬಂದಿದೆ.
ಘಟನೆಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಸ್ಥಳಕ್ಕೆ ಹುಣಸೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.
ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಮಲ್ಲಿಕಾರ್ಜುನ ಬಾಲದಂಡಿ ಮಾಹಿತಿ ನೀಡಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಹರೀಶ್ ಎಂಬಾತ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಹರೀಶ್ ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಆತ ಬರೆದಿರುವ ಡೆತ್ ನೋಟ್ನಲ್ಲಿ ಸಾಲದ ಒತ್ತಡ ಹಾಗೂ ಸೈಟ್ ಖರೀದಿಯಿಂದ ಸಾಲ ಹೆಚ್ಚಾದ ಬಗ್ಗೆ ಉಲ್ಲೇಖಿಸಿದ್ದಾನೆ. ತನ್ನ ಹೆಸರಿನಲ್ಲಿದ್ದ ಮೂರು ಸೈಟ್, ಸ್ವಂತ ಮನೆ ಹಾಗೂ ಕಾರನ್ನು ಯಾರಿಗೆ ನೀಡಬೇಕು ಎಂಬ ವಿವರಗಳನ್ನೂ ಡೆತ್ ನೋಟ್ನಲ್ಲಿ ಬರೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಹರೀಶ್ಗೆ 14 ವರ್ಷಗಳ ಹಿಂದೆ ವಿವಾಹವಾಗಿತ್ತು. ಘಟನೆ ವೇಳೆ ಅವರ ತಾಯಿಯೂ ಮನೆಯಲ್ಲೇ ವಾಸಿಸುತ್ತಿದ್ದರು. ಕುಟುಂಬವು ಎರಡು ದಿನಗಳ ಹಿಂದೆ ಪ್ರವಾಸದಿಂದ ಮರಳಿತ್ತು ಎಂದು ತಿಳಿದುಬಂದಿದೆ. ಪ್ರಕರಣದ ಹಿಂದಿನ ನಿಖರ ಕಾರಣ ಹಾಗೂ ಕೌಟುಂಬಿಕ ಸಮಸ್ಯೆಗಳ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.


