ಹಾಸನ : ರಾಜ್ಯದಲ್ಲಿ ಕಳೆದ2 ವಾರಗಳಿಂದ ನಿರಂತರ ಸುರಿಯುವ ಮಳೆಯಿಂದಾಗಿ ಅಲ್ಲಲ್ಲಿ ಹಲವು ಹಾನಿಉಂಟಾದ ಘಟನೆ ವರದಿಯಾಗಿದೆ. ಸಕಲೇಶಪುರ, ಆಲೂರು ಬೇಲೂರು ಸೇರಿ ವಿವಿದ ತಾಲ್ಲೂಕಿನಲ್ಲಿ ಅಬ್ಬರದ ಮಳೆಯಾಗುತ್ತಿದೆ. ಜೂನ್ ಎರಡನೇ ವಾರದಿಂದ ಜಿಲ್ಲೆಯ ವಿವಿದೆಡೆ ಮಳೆ ಆರಂಭಗೊಂಡಿದೆ. ಇದೀಗ ಅಲ್ಲಲ್ಲಿ ಭೂಕುಸಿತವಾಗಿರುವ ಘಟನೆ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನಾಸದ್ಯಂತ ಭಾರೀ ಪ್ರಮಾಣದ ಮಳೆ ಸುರಿಯುತ್ತಿರುವುದರಿಂದ ಹಾಸನದ ಜೀವನದಿ ಹೇಮಾವತಿ ಉಕ್ಕಿ ಹರಿಯುತ್ತಿದೆ. ಕೇವಲ ಒಂದು ತಿಂಗಳ ಹಿಂದೆ ಬೀಕರ ಬರಗಾಲದಿಂದ ಹರಿವನ್ನೇ ನಿಲ್ಲಿಸಿದ್ದ ನದಿ ಈಗ ತುಂಬಿ ಹರಿಯುತ್ತಿದೆ. ಹಾಸನದಿಂದ ಸಕಲೇಶಪುರ ತಾಲ್ಲೂಕಿನ ಮಾರನಹಳ್ಳಿವರೆಗೆ ನಡೆಯುತ್ತಿರುವ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯ ಹಲವುಕಡೆ ದೊಡ್ಡ ಪ್ರಮಾಣದಲ್ಲಿ ಮಣ್ಣು ಕುಸಿಯುತ್ತಿದ್ದು ಆತಂಕ ಎದುರಾಗಿದೆ. ಸಕಲೇಶಪುರ ಪಟ್ಟಣದ ಮಳಲಿ ಬಳಿಯ ನಿರ್ಮಾಣ ಹಂತದ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಮಣ್ಣು ಕುಸಿದು ಬೀಳುತ್ತಿದೆ. ತಡೆ ಗೋಡೆ ನಿರ್ಮಿಸದೆ ಕಾಂಕ್ರಿಟ್ ರಸ್ತೆ ನಿರ್ಮಾಣ ಮಾಡಿರುವ ಕಾರಣ ಸಕಲೇಶಪುರದಿಂದ ಆಲೆಬೇಲೂರಿಗೆ ತೆರಳೋ ಮಾರ್ಗದ ಮೇಲ್ಸೇತುವೆಯೇ ಕುಸಿದು ಬೀಳುವ ಭೀತಿ ಎದುರಾಗಿದೆ.
ರೆಡ್ ಅಲರ್ಟ್ ಇನ್ನೆಲೆ ಮುಂಜಾಗೃತಾ ಕ್ರಮವಾಗಿ ಜಿಲ್ಲಾಡಳಿತ ಜಿಲ್ಲೆಯ ಹಾಸನ, ಆಲೂರು, ಬೇಲೂರು, ಸಕಲೇಶಪುರ ಹಾಗೂ ಅರಕಲಗೂರು ತಾಲ್ಲೂಕಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಡ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.


